ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಧರ್ಮಸ್ಥಳ: 2022-23ರ ಸಾಲಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 6374 ವಿಶೇಷ ಚೇತನರಿಗೆ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರದಿಂದ ವಿವಿಧ ಉಚಿತ ಸಲಕರಣೆಗಳನ್ನು ವಿತರಿಸಲಾಯಿತು.

ರಾಜ್ಯದಲ್ಲಿ ಸುಮಾರು 13.24 ಲಕ್ಷ ವಿಶೇಷ ಚೇತನರಿದ್ದಾರೆಯೆಂಬ ಮಾಹಿತಿಯಿದೆ. ಕೆಲವರಿಗೆ ಹುಟ್ಟಿನಿಂದಲೇ ಕುರುಡು, ಅಂಗವಿಕಲತೆ ಸಮಸ್ಯೆಗಳು ಬಂದರೆ ಇನ್ನು ಕೆಲವರಿಗೆ ದುರದೃಷ್ಟವಶಾತ್ ಅಪಘಾತಗಳು, ಮಾರಕರೋಗಗಳಿಂದ ಬರುತ್ತವೆ. ಗಂಭೀರ ಸಮಸ್ಯೆಯಿರುವ ವಿಶೇಷ ಚೇತನರ ಪಾಲನೆ ಪೋಷಣೆ, ಅತ್ಯಂತ ಕಷ್ಟಕರವಾದುದು. ಇವರ ಯೋಗಕ್ಷೇಮ ನೋಡುವುದಕ್ಕಾಗಿಯೇ ಮನೆಯಲ್ಲಿ ಒಂದೆರಡು ಮಂದಿ ಇರಬೇಕಾಗಿದೆ. ಮುಖ್ಯವಾಗಿ ಸ್ನಾನ, ಶೌಚ ಊಟೋಪಚಾರಗಳನ್ನು ಸ್ವಯಂ ಮಾಡಿಕೊಳ್ಳಲು ಸಾಧ್ಯವಾಗದ, ಎಷ್ಟೋ ಮಂದಿ ಇತರರ ಅವಲಂಬನೆಯಲ್ಲಿ ಬದುಕಬೇಕಿದೆ. ಮನೆಯಿಂದ ಹೊರಹೋಗಲಾರದೆ, ಮಲಗಿದಲ್ಲೇ ಇರುವ ವಿಶೇಷ ಚೇತನರ ಬದುಕಂತೂ ಅತ್ಯಂತ ಶೋಚನೀಯವಾಗಿರುತ್ತದೆ. ನಿತ್ಯ ಕೂಲಿ ಮಾಡಿ ಬದುಕುವ ಎಷ್ಟೋ ಕುಟುಂಬಗಳು ಇದರಿಂದಾಗಿ ಆರ್ಥಿಕ ಸಂಕಷ್ಟವನ್ನೆದುರಿಸುವುದಲ್ಲದೇ ಮಾನಸಿಕವಾಗಿಯೂ ನೊಂದಿರುತ್ತಾರೆ. ಇದನ್ನರಿತ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಇವರಿಗಾಗಿಯೇ ವಿವಿಧ ಉಚಿತ ಸಲಕರಣೆಗಳನ್ನು ನೀಡುವ ಜನಮಂಗಲ ಕಾರ್ಯಕ್ರಮ ಜಾರಿಗೆ ತಂದರು.

ಜನಮಂಗಲ ಕಾರ್ಯಕ್ರಮದಂತೆ ಹಾಸಿಗೆ ಹಿಡಿದು ಮಲಗಿದಲ್ಲಿಯೇ ಇದ್ದವರಿಗೆ ಹುಣ್ಣು (ಬೆಡ್ ಸೋರ್) ಆಗದಂತೆ ನೀರಹಾಸಿಗೆ (ವಾಟರ್ ಬೆಡ್), ಅಪಘಾತಕ್ಕೊಳಗಾಗಿ ನಡೆದಾಡಲು ಸಾಧ್ಯವಿಲ್ಲದವರಿಗೆ ಓಡಾಡಲು ಗಾಲಿಕುರ್ಚಿ (ವೀಲ್ ಚಯರ್), ಏಕಕಾಲಿನ ಕೈಗೋಲು (ಸಿಂಗಲ್ ಲೆಗ್ ವಾಕಿಂಗ್ ಸ್ಟಿಕ್), ಮೂರುಕಾಲಿನ ಕೈಗೋಲು (ತ್ರಿ ಲೆಗ್ ವಾಕಿಂಗ್ ಸ್ಟಿಕ್), ಹಾಸಿಗೆ ಹಿಡಿದ ರೋಗಿಗಳಿಗೆ ಸ್ನಾನಕ್ಕೆ, ಶೌಚಕ್ಕೆ ಹೋಗಲು ಗಾಲಿಕುರ್ಚಿ (ಕಮೋಡ್ ವೀಲ್ ಚಯರ್), ಅಪಘಾತಕ್ಕೊಳಗಾದವರಿಗೆ ಊರುಗೋಲು (ಆಕ್ಸಿಲರಿ ಕ್ರಚಸ್), ಸ್ಟ್ರೋಕ್ (ಪ್ಯಾರಾಲಿಸಿಸ್)ಗೆ ತುತ್ತಾದವರಿಗೆ ನಡುಗೋಲು ವಿತರಿಸಲಾಯಿತು.

Leave a Comment

error: Content is protected !!