25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ


ಬೆಳ್ತಂಗಡಿ : ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 104 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಲಿದೆ ಎಂದು ಪ.ರಾಮಕೃಷ್ಣ ಶಾಸ್ತ್ರಿ ಅಭಿನಂದನಾ ಸಮಿತಿ ಸಂಚಾಲಕ ಸಂಪತ್ ಬಿ. ಸುವರ್ಣ ತಿಳಿಸಿದ್ದಾರೆ.
ಅವರು ಜೂ. 30 ರಂದು ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿ, 1953ರಲ್ಲಿ ಪುತ್ತೂರಿನ ಪೋಳ್ಯದಲ್ಲಿ ಜನಿಸಿದ ರಾಮಕೃಷ್ಣ ಶಾಸ್ತ್ರಿ ಅವರು ಎಳವೆಯಲ್ಲಿಯೇ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ನೆಲೆಸಿದ್ದು ತನ್ನ 11ನೆಯ ವಯಸ್ಸಿನಲ್ಲಿ ಬರವಣಿಗೆ ಆರಂಭಿಸಿದ್ದರು. 7ನೆಯ ತರಗತಿವರೆಗೆ ಮಾತ್ರ ಶಾಲಾ ವಿದ್ಯಾಭ್ಯಾಸ ಮಾಡಿದ್ದರೂ ಶಾಲೆ, ಪದವಿ ತರಗತಿಗೆ ಪಠ್ಯವಾಗುವಷ್ಟು ಸಮಗ್ರ ಬರವಣಿಗೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಆ ದಿನ ಅಪರಾಹ್ನ 2 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದ್ದು ಕಾರ್ಯಕ್ರಮಕ್ಕೆ ಚಾಲನೆಯನ್ನು ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ಪ್ರಾಚಾರ್ಯ ಡಾ| ಎನ್. ಎಂ. ಜೋಸೆಫ್ ನೀಡಲಿದ್ದಾರೆ. ಯಕ್ಷಗಾನಾಮೃತದಲ್ಲಿ ಭಾಗವತರಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ, ಗಿರೀಶ್ ರೈ ಕಕ್ಯಪದವು, ಹಿಮ್ಮೇಳದಲ್ಲಿ ಕೃಷ್ಣಪ್ರಕಾಶ ಉಳಿತ್ತಾಯ, ಶಿತಿಕಂಠ ಭಟ್ ಉಜಿರೆ, ನಿರೂಪಣೆಯಲ್ಲಿ ಬಿ. ಎನ್. ಗಿರೀಶ್ ಹೆಗ್ಡೆ ಧರ್ಮಸ್ಥಳ ಭಾಗವಹಿಸುತ್ತಾರೆ.
ಅಪರಾಹ್ನ 3.30 ರಿಂದ ಪ. ರಾಮಕೃಷ್ಣ ಶಾಸ್ತ್ರಿಗಳ ಸಾಹಿತ್ಯ ಅವಲೋಕನದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಎಂ. ಪಿ. ಶ್ರೀನಾಥ್ ಉಜಿರೆ ವಹಿಸಲಿದ್ದಾರೆ. ಪತ್ರಿಕಾ ಲೇಖನ ವಿಷಯದ ಕುರಿತು ಉದಯವಾಣಿ ನಿವೃತ್ತ ಹಿರಿಯ ಉಪಸಂಪಾದಕ ನಿತ್ಯಾನಂದ ಪಡ್ರೆ ಮಣಿಪಾಲ, ಸಮಗ್ರ ಸಾಹಿತ್ಯ ಕುರಿತು ಸ.ಪ್ರ.ದ.ಕಾಲೇಜು ಬೆಳ್ತಂಗಡಿ ಉಪನ್ಯಾಸಕ ಡಾ| ಕೃಷ್ಣಾನಂದ ಪಿ.ಎಂ. ಗರ್ಡಾಡಿ, ಮಕ್ಕಳ ಸಾಹಿತ್ಯ ಕುರಿತು ಬೆಳ್ತಂಗಡಿಯವರೇ ಆದ ಸಾಹಿತಿ ಡಾ| ದೀಪಾ ಪಡ್ಕೆ ಬೆಂಗಳೂರು ಮಾತನಾಡಲಿದ್ದಾರೆ.
ಸಂಜೆ 5 ರಿಂದ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು ಪುಸ್ತಕ ಬಿಡುಗಡೆ, ಅಭಿನಂದನೆ, ಗೌರವ ಸಾನ್ನಿಧ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಜನಪದ ವಿವಿ ಹಾವೇರಿಯ ವಿಶ್ರಾಂತ ಕುಲಪತಿ ಡಾ| ಕೆ. ಚಿನ್ನಪ್ಪ ಗೌಡ ವಹಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್, ಕೆ. ಪ್ರತಾಪಸಿಂಹ ನಾಯಕ್, ಪಾವಂಜೆ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್, ಅಭಿನಂದಿತರಾಗುವ ಪ.ರಾಮಕೃಷ್ಣ ಶಾಸ್ತ್ರಿಮಚ್ಚಿನ, ಅವರ ಪತ್ನಿ ಶಾರದಾ ಆರ್. ಶಾಸ್ತ್ರಿಉಪಸ್ಥಿತರಿರುತ್ತಾರೆ. ಸಮಾರಂಭದಲ್ಲಿ ಲಕ್ಷ್ಮೀ ಮಚ್ಚಿನ ಬರೆದ ಬದುಕು ಬರಹ ಬವಣೆ: ಪ. ರಾಮಕೃಷ್ಣ ಶಾಸ್ತ್ರಿಹೆಜ್ಜೆ ಗುರುತುಗಳು, ಪ. ರಾಮಕೃಷ್ಣ ಶಾಸ್ತ್ರಿ ಅವರು ಬರೆದ – ಮಳೆ ಮಳೆ (ಲೇಖನಗಳ ಸಂಗ್ರಹ), ನಟನ ಮನೋಹರಿ (ಕಾದಂಬರಿ), ರೋಚಕ ಲೋಕ (ತರಂಗ ಲೇಖನಗಳ ಸಂಗ್ರಹ), ಪ್ರಪಂಚದ ಸೋಜಿಗಗಳು (ತರಂಗ ಲೇಖನಗಳ ಸಂಗ್ರಹ) ಪುಸ್ತಕಗಳು ಬಿಡುಗಡೆಯಾಗಲಿವೆ ಎಂದರು.

ಮಕ್ಕಳ ಕತೆ ಇವರ ಜನಪ್ರಿಯ ಮಾಧ್ಯಮವಾದರೂ ಕತೆ, ಲೇಖನ, ಕಾದಂಬರಿ, ಕವಿತೆ, ವಿಡಂಬನೆ, ನಾಟಕ, ಹನಿಗವನ ಹೀಗೆ ಎಲ್ಲ ಪ್ರಕಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆಕಾಶವಾಣಿ, ದೂರದರ್ಶನದಲ್ಲೂ ಕಾರ್ಯಕ್ರಮಗಳು ಪ್ರಸಾರವಾಗಿವೆ. ಲೇಖನಗಳು, ಕತೆಗಳು ತುಳು, ಇಂಗ್ಲಿಷ್, ಮಲಯಾಳ, ಹಿಂದಿ ಭಾಷೆಗೆ ಅನುವಾದಗೊಂಡಿವೆ. ಸಮಾಜಸೇವೆ, ಅಭಿವೃದ್ಧಿಯ ಪುರೋಗಾಮಿ ಚಿಂತನೆ, ಸಹಕಾರಿ ಕ್ಷೇತ್ರದಲ್ಲೂ ಅನುಭವ, ಯಕ್ಷಗಾನ ಕ್ಷೇತ್ರದಲ್ಲೂ ಭಾಗವಹಿಸುವಿಕೆ ಇದೆ. ಹೀಗೆ ಎಲ್ಲ ರಂಗದಲ್ಲಿ ತೊಡಗಿಸಿಕೊಂಡವರು. ಈ ನಿಟ್ಟಿನಲ್ಲಿ ಅವರ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ನಡೆಸಬೇಕೆಂಬ ಇರಾದೆಯಿಂದ ಆತ್ಮೀಯರು ಒಟ್ಟಾಗಿ ಈ ಸಮಾರಂಭ ಆಯೋಜಿಸಲಾಗಿದೆ. ಶಾಸ್ತ್ರಿಯವರ ಒಡನಾಡಿಗಳು, ಆತ್ಮೀಯರು, ಬಂಧುಗಳು, ಸಾಹಿತ್ಯದ ಪರಿಚಾರಕರು, ಸಾರ್ವಜನಿಕರು ಈ ಸಮಾರಂಭದಲ್ಲಿ ಭಾಗವಹಿಸಿ ಸಾಹಿತ್ಯ ಪರಿಚಾರಕರ ಈ ಸಮಾರಂಭವನ್ನು ಇನ್ನಷ್ಟು ಅರ್ಥಪೂರ್ಣಗೊಳಿಸಬೇಕೆಂದು ಸಮಿತಿಯ ಸರ್ವಸದಸ್ಯರ ಅಪೇಕ್ಷೆಯಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕುರಿಯ ವಿಠಲಶಾಸ್ತ್ರಿಸಾಂಸ್ಕೃತಿಕ ಪ್ರತಿಷ್ಠಾನ ಸಂಚಾಲಕರು ಎನ್. ಅಶೋಕ ಭಟ್ ಉಜಿರೆ, ಕನ್ನಡ ಸಾಹಿತ್ಯ ಪರಿಷತ್ತು, ದ.ಕ. ಜಿಲ್ಲೆ ಅಧ್ಯಕ್ಷ ಡಾ. ಶ್ರೀನಾಥ್ ಎಂ.ಪಿ., ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ಘಟಕ ಅಧ್ಯಕ್ಷ ಯದುಪತಿ ಗೌಡ ಉಪಸ್ಥಿತರಿದ್ದರು.

Related posts

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya
error: Content is protected !!