September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಬೆಳ್ತಂಗಡಿ: ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿಯಲ್ಲಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಒಬ್ಬರು ಇಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಗಳೂರಿನ ಬೋಂದೆಲ್ ನಲ್ಲಿರುವ ಪಿಡಬ್ಲ್ಯುಡಿ ಇಲಾಖೆಯ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಬಂಧಿಸಿದ್ದಾರೆ. ಕ್ಲಾಸ್ 2 ದರ್ಜೆಯ ಗುತ್ತಿಗೆದಾರ ಪ್ರಭಾಕರ ನಾಯ್ಕರವರಿಂದ ರೂ. 20 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಘಟನೆ ವಿವರ: ಪ್ರಭಾಕರ ನಾಯ್ಕರವರು ಲೋಕೋಪಯೋಗಿ ಇಲಾಖೆಯಲ್ಲಿ ಕ್ಲಾಸ್-2 ದರ್ಜೆಯ ಗುತ್ತಿಗೆದಾರರಾಗಿದ್ದಾರೆ. ಲೋಕೋಪಯೋಗಿ ಇಲಾಖೆಯಡಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಮೀಸಲಾಗಿರಿಸಿದ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಮಲಂಪಯ್ಯ ಪರಿಶಿಷ್ಟ ಪಂಗಡದ ಕಾಲೋನಿಯ ಎಎನ್ಎಂ ರಸ್ತೆ ಕಾಮಗಾರಿಯನ್ನು 25 ಲಕ್ಷ ರೂ ಮೊತ್ತ ಹಾಗೂ ಬೆಳ್ತಂಗಡಿ ತಾಲೂಕು ಕರಿಮಣೇಲು ಗ್ರಾಮದ ಕೈರೋಳಿ ಎಂಬಲ್ಲಿನ ಪರಿಶಿಷ್ಟ ಜಾತಿ ಕಾಲೊನಿಯ ರಸ್ತೆ ಕಾಮಗಾರಿಯ 20 ಲಕ್ಷ ಮೊತ್ತದ ಟೆಂಡರ್ ಪ್ರಕ್ರಿಯೆಯಲ್ಲಿ ಬಿಡ್ ಸಲ್ಲಿಸಿದ್ದ ಪ್ರಭಾಕರ ನಾಯ್ಕರವರು ಕಾಮಗಾರಿ ಪೂರ್ಣಗೊಳಿಸಿದ್ದರು. ಕಾಮಗಾರಿ ಮುಗಿದ ಬಳಿಕ ಸೈಟ್‌ನ ಮೆಟೀರಿಯಲ್ ಪರಿಶೀಲನೆ ಮಾಡಿ ವರದಿ ನೀಡಲು ಮಂಗಳೂರು ಲೋಕೋಪಯೋಗಿ ಇಲಾಖೆಯ ಗುಣ ಮತ್ತು ಭರವಸೆ ವಿಭಾಗಕ್ಕೆ ಪ್ರಭಾಕರ ನಾಯ್ಕರವರ ಕಡತ ತಲುಪಿತ್ತು. ಪ್ರಭಾಕರ ನಾಯ್ಕರವರು ಅ.11ರಂದು ಲೋಕೋಪಯೋಗಿ ಇಲಾಖೆಯ ಮಂಗಳೂರು ಕಚೇರಿಗೆ ಹೋಗಿ ಕಿರಿಯ ಇಂಜಿನಿಯರ್ ರೊನಾಲ್ಡ್ ಲೋಬೋರವರಲ್ಲಿ ಮಾತನಾಡಿದಾಗ ಅವರು ಫೈಲ್ ಬಂದಿರುವುದಾಗಿ ತಿಳಿಸಿದ್ದರಲ್ಲದೆ ಅಮೌಂಟ್ ಕೊಟ್ಟು ಹೋಗಿ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಕೊಟ್ಟು ಕೆಲಸ ಮಾಡಲು ಇಷ್ಟ ಇಲ್ಲದ ಪ್ರಭಾಕರ ನಾಯ್ಕರವರು ವಾಪಸ್ ಬಂದಿದ್ದರು. ಅ.16ರಂದು ಮಂಗಳೂರು ಬೊಂದೇಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆಯ ಗುಣ ಮತ್ತು ಭರವಸೆ ವಿಭಾಗದ ಕಚೇರಿಗೆ ಹೋಗಿ ಕಿರಿಯ ಇಂಜಿನಿಯರ್ ರೊನಾಲ್ಡ್ ಲೋಬೋರವರಲ್ಲಿ ಪ್ರಭಾಕರ ನಾಯ್ಕರವರು ಮತ್ತೆ ಮಾತನಾಡಿದ್ದರು. ಕಡತದಲ್ಲಿ ನಮೂದಿಸಿದಂತೆ ಮೆಟೀರಿಯಲ್ ಪರಿಶೀಲನೆ ಮಾಡಿ ವರದಿ ನೀಡಲು 22 ಸಾವಿರ ರೂ ಲಂಚ ನೀಡಬೇಕು ಎಂದು ರೊನಾಲ್ಡ್ ಲೋಬೋ ಈ ವೇಳೆ ಬೇಡಿಕೆ ಇಟ್ಟಿದ್ದರು. ಸ್ವಲ್ಪ ಕಮ್ಮಿ ಮಾಡಿ ಎಂದು ಪ್ರಭಾಕರ ನಾಯ್ಕರವರು ಹೇಳಿದಾಗ 20 ಸಾವಿರ ರೂ ಕೊಡಿ ಎಂದು ರೊನಾಲ್ಡ್ ಲೋಬೋ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದ ಪ್ರಭಾಕರ ನಾಯ್ಕರವರು ಅ.14ರಂದು ಮಂಗಳೂರು ಬೊಂದೇಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆಯ ಗುಣ ಮತ್ತು ಭರವಸೆ ವಿಭಾಗದ ಕಿರಿಯ ಇಂಜಿನಿಯರ್ ರೊನಾಲ್ಡ್ ಲೋಬೋರವರಿಗೆ 20 ಸಾವಿರ ರೂ ಲಂಚದ ಹಣ ನೀಡುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೊನಾಲ್ಡ್ ಲೋಬೋರವರನ್ನು ಬಂಧಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತದ ದ.ಕ. ಪೊಲೀಸ್ ಅಧೀಕ್ಷಕರಾದ ಪುತ್ತೂರು ತಾಲೂಕಿನ ಉಪ್ಪಿನಂಗಡಿಯವರಾದ ಸಿ.ಎ. ಸೈಮನ್‌ರವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಕಲಾವತಿ.ಕೆ, ಚಲುವರಾಜು ಬಿ, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ ಮತ್ತು ಸುರೇಶ್ ಕುಮಾರ್ ಪಿ.ರವರು ಕಾರ್ಯಾಚರಣೆ ನಡೆಸಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya
error: Content is protected !!