ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 8 ರಿಂದ 12 ರ ವರೆಗೆ ನಡೆಯಲಿವೆ.

ಸರ್ವಧರ್ಮ ಸಮ್ಮೇಳನ: ಡಿ. 11 ರಂದು ಸೋಮವಾರ ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 91ನೆ ಅಧಿವೇಶನವನ್ನು ಖ್ಯಾತ ವಿದ್ವಾಂಸ ಬೆಂಗಳೂರಿನ ಡಾ. ಗುರುರಾಜ ಕರ್ಜಗಿ ಉದ್ಘಾಟಿಸುವರು.
ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.
ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯವಾದಿ ಡಾ. ಎಂ. ಆರ್. ವೆಂಕಟೇಶ್, ಬೆಂಗಳೂರಿನ ವಿಭು ಅಕಾಡೆಮಿ ಮುಖ್ಯಸ್ಥ ವಿಜಯಪುರದ ಮಹಮ್ಮದ್  ಗೌಸ್ ಹವಾಲ್ದಾರ ಧಾರ್ಮಿಕ ಉಪನ್ಯಾಸ ನೀಡುವರು.
ರಾತ್ರಿ ಗಂಟೆ 8.30 ರಿಂದ ಬೆಂಗಳೂರಿನ ಅನುರಾಧಾ ವಿಕ್ರಾಂತ್ ಮತ್ತು ಬಳಗದವರಿಂದ ನೃತ್ಯ ಪ್ರದರ್ಶನವಿದೆ.
ಸಾಹಿತ್ಯ ಸಮ್ಮೇಳನ: ಡಿ. 12 ರಂದು ಮಂಗಳವಾರ ಸಂಜೆ 5 ಗಂಟೆಗೆ ಸಾಹಿತ್ಯ ಸಮ್ಮೇಳನದ 91ನೆ ಅಧಿವೇಶನವನ್ನು ಬೆಂಗಳೂರಿನ ಇಸ್ರೋದ ಅಧ್ಯಕ್ಷ ಡಾ. ಎಸ್. ಸೋಮನಾಥ್ ಉದ್ಘಾಟಿಸುವರು.
ಬೆಂಗಳೂರಿನ ಖ್ಯಾತ ಗಮಕಿ ಡಾ.ಎ.ವಿ. ಪ್ರಸನ್ನ ಅಧ್ಯಕ್ಷತೆ ವಹಿಸುವರು.
ಹೊನ್ನಾವರದ ನಿವೃತ್ತ ಉಪನ್ಯಾಸಕ ಡಾ. ಶ್ರೀಪಾದ ಶೆಟ್ಟಿ, ಬೆಂಗಳೂರಿನ ರಂಗಕರ್ಮಿ ಪ್ರಕಾಶ್ ಬೆಳವಡಿ ಮತ್ತು ಬಂಟ್ವಾಳದ ಡಾ. ಅಜಕ್ಕಳ ಗಿರೀಶ್ ಭಟ್ ಉಪನ್ಯಾಸ ನೀಡುವರು.
ರಾತ್ರಿ ಗಂಟೆ 8.30 ರಿಂದ ಬೆಂಗಳೂರಿನ ಜತಿನ್ ನೃತ್ಯ ಅಕಾಡೆಮಿಯ ವಿದುಷಿ ಅರ್ಚನಾ ಪುಣ್ಯೇಶ್ ಮತ್ತು ಬಳಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮವಿದೆ.
ಡಿ. 8 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಹೈಸ್ಕೂಲು ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್‌ನಂದನ್ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಉದ್ಘಾಟಿಸುವರು.


ವಸ್ತುಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಿವೆ.
ಡಿ. 10 ರಂದು ಭಾನುವಾರ ರಾತ್ರಿ 7 ರಿಂದ 10ರ ವರೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಬಳಗದವರಿಂದ ಗಾನ, ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.
ಲಕ್ಷದೀಪೋತ್ಸವ: ಡಿ. 12 ರಂದು ಮಂಗಳವಾರ ರಾತ್ರಿ 12 ಗಂಟೆ ಬಳಿಕ ಲಕ್ಷದೀಪೋತ್ಸವ ನಡೆಯಲಿದೆ.
ಅಂದು ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಧರ್ಮಸ್ಥಳಕ್ಕೆ ಬಂದು ವೈವಿಧ್ಯಮಯ ಸೇವೆ ಅರ್ಪಿಸುವರು.
ಕೆ.ಎಸ್.ಆರ್.ಟಿ.ಸಿ. ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.


ಉತ್ಸವಗಳು: ಡಿ. 8 ಶುಕ್ರವಾರ: ಹೊಸಕಟ್ಟೆ ಉತ್ಸವ, ಡಿ. 9 ಶನಿವಾರ: ಕೆರೆಕಟ್ಟೆ ಉತ್ಸವ, ಡಿ. 10 ಭಾನುವಾರ: ಲಲಿತೋದ್ಯಾನ ಉತ್ಸವ, ಡಿ. 11 ಸೋಮವಾರ: ಕಂಚಿಮಾರುಕಟ್ಟೆ ಉತ್ಸವ, ಡಿ. 12 ಮಂಗಳವಾರ: ಗೌರಿಮಾರುಕಟ್ಟೆ ಉತ್ಸವ, ಲಕ್ಷದೀಪೋತ್ಸವ, ಡಿ. 13 ಬುಧವಾರ: ಸಂಜೆ 7 ರಿಂದ ಸಮವಸರಣ ಪೂಜೆ: ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಆವರಣದಲ್ಲಿ.

Leave a Comment

error: Content is protected !!