ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಬೆಳ್ತಂಗಡಿ: ನೆರಿಯದಿಂದ ಗುರುವಾಯನಕೆರೆಗೆ ಖಾಸಗಿ ಜಲವಿದ್ಯುತ್ ಘಟಕದಿಂದ ವಿದ್ಯುತ್ ಹರಿಯುವ ವಯರ್ ನಲ್ಲಿ‌‌ ಮಧ್ಯ ರಾತ್ರಿ ಬೆಂಕಿ ಹೊತ್ತಿ‌ ಉರಿದ ಘಟನೆ ಸೋಮಂತಡ್ಕ ಶಾರದಾ ನಗರ ಅಡೂರು ತಿರುವು ಸನಿಹ ನಡೆದಿದೆ.

ಕಿರು ಜಲವಿದ್ಯುತ್ ಯೋಜನೆಯಿಂದ ಉತ್ಪಾದನೆಯಾಗುವ ವಿದ್ಯುತ್ ಕೇಬಲ್ ಮೂಲಕ ನೆರಿಯದಿಂದ ಗುರುವಾಯನಕೆರೆ ಗ್ರಿಡ್ಡ್‌ಗೆ ಪ್ರವಹಿಸುತ್ತಿದೆ. ಈ ವಯರ್ ನಲ್ಲಿ‌ 2 ಗಂಟೆ ರಾತ್ರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಉಂಡೆಗಳು ಕೆಳಬಿದ್ದು ಪೊದೆಗೆ ಬೆಂಕಿ ಹತ್ತಿಕೊಂಡಿತ್ತು. ಕೆಲವೇ ನಿಮಿಷಗಳಲ್ಲಿ‌ ಬೆಂಕಿ ವ್ಯಾಪಿಸಲಾರಂಭಿಸಿತು.ಆದರೆ
ಕಳೆದ ರಾತ್ರಿ ಮಂಜುಶ್ರೀ ಭಜನಾ ಮಂದಿರದಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ ಇದ್ದುದರಿಂದ ರಸ್ತೆಯಲ್ಲಿ ಅಪರಾತ್ರಿಯೂ ಜನ ಸಂಚಾರ ಇತ್ತು. ಪೂಜೆಯಿಂದ ಮನೆಗೆ ಮರಳುತ್ತಿದ್ದ ಮುಂಡಾಜೆ ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ ಅವರು ಬೆಂಕಿ ಉರಿಯುತ್ತಿದ್ದುದನ್ನು‌ ಗಮನಿಸಿದ ಇಲಾಖೆ ಹಾಗೂ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
ಬೆಂಕಿ ಹೊತ್ತಿಕೊಂಡ ಪಕ್ಕದಲ್ಲೇ ಮನ್ನತ್ ಸ್ಕ್ರಾಪ್ ಮತ್ತು ಹಳೆಯ ವಾಹನಗಳ ಬಿಡಿಭಾಗ ಮಾರಾಟದ ವಿಶಾಲ ಶೋರೂಮ್ ಇದ್ದು, ತಡರಾತ್ರಿ ಬೆಂಕಿಯನ್ನು ಯಾರೂ ನೋಡಿರದಿದ್ದರೆ ಬೆಂಕಿ ವ್ಯಾಪಿಸಿ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅಲ್ಲೇ ಹಿಂದಕ್ಕೆ ಮನೆಗಳು,‌ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೂಡ‌ ಇತ್ತು.
ವಿಷಯ ಅರಿತ ಸ್ಥಳೀಯರು ಪೊದೆಗೆ ನೀರು‌ಹಾಯಿಸಿ ಬೆಂಕಿ‌‌ ಹಬ್ಬದಂತೆ ತಡೆಯುವಲ್ಲಿ‌ ಯಶಸ್ವಿಯಾಗಿದ್ದಾರೆ.


ಈ ವೇಳೆ ಹೊತ್ತಿ ಉರಿದ ಕೇಬಲ್ ತುಂಡಾಗಿ ಬೇರ್ಪಟ್ಟಿತು. ತಾಂತ್ರಿಕ ವ್ಯವಸ್ಥೆಯಿಂದಲೋ(ಟ್ರಿಪ್) ಅಥವಾ ವಯರ್ ಸಂಪೂರ್ಣ ಪರಿಣಾಮದಿಂದಲೋ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಬೆಂಕಿ ನಿಂತು ಹೋಯಿತು. ಇಲ್ಲದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾದ್ಯತೆ ಇತ್ತು.

Leave a Comment

error: Content is protected !!