30 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

ಬೆಳ್ತಂಗಡಿ : ಮೊದಲ ಹಂತದಲ್ಲಿಯೇ ಸೂಕ್ತ ತಜ್ಞ ವೈದ್ಯರಿಂದ ತಪಾಸಣೆ ನಡೆಸಿ ಉತ್ತಮ ಚಿಕಿತ್ಸೆ ಪಡೆದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ. ಕ್ಯಾನ್ಸರ್ ರೋಗಕ್ಕೆ ಹೆದರುವ ಅಗತ್ಯವಿಲ್ಲ ಸೂಕ್ತ ಔಷಧಿ ಸೇವನೆಯಿಂದ ಕ್ಯಾನ್ಸರ್ ರೋಗ ಗೆಲ್ಲಬಹುದು ಎಂದು ಕಾಯರ್ತಡ್ಕ ಸಂತ ಸೆಬಾಸ್ಟಿಯನ್ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಜೋಸೆಫ್ ವಾಳುಕಾರನ್ ಅಭಿಪ್ರಾಯಪಟ್ಟರು. ಅವರು ಫೆ. 15 ರಂದು ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ, ಗ್ರಾಮ ಪಂಚಾಯತ್ ಕಳೆಂಜ, ಸ್ನೇಹಕಿರಣ್ ಜಿಲ್ಲಾ ಒಕ್ಕೂಟ ಬೆಳ್ತಂಗಡಿ, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ, ಸರ್ವಶ್ರೀ ಮಹಾಸಂಘ ಕಳೆಂಜ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಮಂಗಳೂರು ಇವುಗಳ ಆಶ್ರಯದಲ್ಲಿ ಕಾಯರ್ತಡ್ಕ ಪೇಟೆಯಲ್ಲಿ ನಡೆದ ಕ್ಯಾನ್ಸರ್ ರೋಗದ ವಿರುದ್ಧದ ಬೃಹತ್ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಇದರ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಜೆ.ಸಿ.ಐ ಕೊಕ್ಕಡ ಕಪಿಲ ಇದರ ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್ ಕಾಯಡ ಉಪಸ್ಥಿತರಿದ್ದರು.

ಕಳೆಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಹೊನ್ನಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಳೆಂಜ ವಲಯದ ಆಶಾ ಕಾರ್ಯಕರ್ತೆ ಶ್ರೀಮತಿ ದೇವಕಿ ಎ. ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾಗಿರುವ ವಂದನೀಯ ಫಾ. ಬಿನೋಯಿ ಎ. ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಮೂಲಕ ನಡೆಸಲ್ಪಡುವ ಕ್ಯಾನ್ಸರ್ ರೋಗದ ವಿರುದ್ಧದ ಅಭಿಯಾನದ ಕುರಿತು ಸಮಗ್ರವಾಗಿ ವಿವರಿಸಿದರು. ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯ ಕಮಿಷನ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೇಕ್ಕಾಟ್ಟೀಲ್ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಸ್ವಾಗತಿಸಿ, ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶನಿ ನಿಲಯ ಮಂಗಳೂರು ಇಲ್ಲಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿನಿ ಕು. ಕೀರ್ತನಾ ಧನ್ಯವಾದವಿತ್ತರು. ಸಂಸ್ಥೆಯ ಸ್ಪರ್ಶ ಯೋಜನೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕಾಯರ್ತಡ್ಕ ಪೇಟೆಯಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮೈಕ್ ಉದ್ಘೋಷಣೆ ಮಾಡಿ, ಸಾರ್ವಜನಿಕರಿಗೆ ಕ್ಯಾನ್ಸರ್ ರೋಗದ ಬಗ್ಗೆ ಕರಪತ್ರ ಹಂಚಲಾಯಿತು. ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗ ಪೀಡಿತ ವ್ಯಕ್ತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ಅಂಗಡಿ ಮುಂಗಟ್ಟುಗಳ ವರ್ತಕರಿಂದ ಧನ ಸಹಾಯ ಸಂಗ್ರಹಣೆ ಮಾಡಲಾಯಿತು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಿಬ್ಬಂದಿ ವರ್ಗ, ಮಂಗಳೂರು ಸಂತ ಅಲೋಶಿಯಸ್ ಹಾಗೂ ರೋಶನಿ ನಿಲಯ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ವ ಸಹಾಯ ಸಂಘಗಳ ಮಹಿಳೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya
error: Content is protected !!