May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

ಧರ್ಮಸ್ಥಳ: ರಾಜ್ಯಾದ್ಯಂತ ಜನವರಿ ತಿಂಗಳಲ್ಲಿ ಶುದ್ಧಜಲ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರಂತೆ ರಾಜ್ಯದ ಸುಮಾರು 1.50 ಲಕ್ಷ ಜನರಿಗೆ ಶುದ್ಧಜಲ ಬಳಕೆಯ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್ ರವರು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅಧಿಕಗೊಂಡ ಜನಸಂಖ್ಯೆ ಹಾಗೂ ಪರಿಸರ ನಾಶದ ಪರಿಣಾಮದಿಂದ ನೀರಿನ ಅಭಾವ ತಲೆದೋರಿದ್ದು ಶುದ್ಧ ಕುಡಿಯುವ ನೀರನ್ನು ಜನರಿಗೆ ಪೂರೈಸುವುದು ಕಷ್ಟಕರವಾಗಿ ಪರಿಣಮಿಸಿದೆ.


ರಾಜ್ಯದ ಹಲವಾರು ಹಳ್ಳಿಗಳಲ್ಲಿ ಜನರು ಇಂದೂ ಕೂಡ ಅಶುದ್ಧ ನೀರನ್ನು ಕುಡಿಯುತ್ತಿರುವುದು ಕಾಣುತ್ತೇವೆ. ರಾಜ್ಯದ ಶೇ. ೬೦ರಷ್ಟು ಪ್ರದೇಶಗಳಲ್ಲಿ ಕುಡಿಯುವ ನೀರಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಫ್ಲೋರೈಡ್, ಶೇ. 20 ರಷ್ಟುಅಧಿಕ ನೈಟ್ರೇಟ್ ಹಾಗೂ ಶೇ. 30.ರಷ್ಟು ಸೂಕ್ಷ್ಮಾಣುಗಳಿಂದ ಕಲುಷಿತವಾಗಿ ಜನರು ರೋಗ ರುಜಿನಗಳಿಗೆ ತುತ್ತಾಗುತ್ತಿದ್ದಾರೆ. ರಾಜ್ಯದ ಹೆಚ್ಚಿನ ತಾಲೂಕುಗಲ್ಲಿ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಸಮಸ್ಯೆ ಹೆಚ್ಚಾಗಿ ಕಂಡುಬಂದಿದೆ.


ರಾಜ್ಯದ ವಿವಿಧೆಡೆಯಿಂದ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಂದ ಫ್ಲೋರೈಡ್ ಹಾಗೂ ಅಶುದ್ಧ ನೀರಿನಿಂದಾಗುತ್ತಿರುವ ಸಮಸ್ಯೆಯನ್ನು ಕೇಳಿ ತಿಳಿದುಕೊಂಡ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕರ್ನಾಟಕದಲ್ಲಿ ಪ್ರಥಮವಾಗಿ ಸಮುದಾಯ ಶುದ್ಧಕುಡಿಯುವ ನೀರಿನ ಘಟಕವನ್ನು ಸ್ಥಾಪನೆ ಮಾಡುವ ನಿರ್ಧಾರ ಕೈಗೊಂಡರು. ಇದರಂತೆ 2009 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಯಲ್ಲಿ ಮೊದಲ ಶುದ್ಧಕುಡಿಯುವ ನೀರಿನ ಘಟಕವನ್ನು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು ಲೋಕಾರ್ಪಣೆ ಮಾಡಿದರು.


ಶುದ್ಧಗಂಗಾ ಎಂಬ ಹೆಸರಿನಲ್ಲಿ ಇದುವರೆಗೆ ರಾಜ್ಯಾದ್ಯಂತ 481 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಪ್ರತೀ ನಿತ್ಯ ಸುಮಾರು 5,55,೦೦೦ ಜನರು ಶುದ್ಧನೀರನ್ನು ಬಳಸುತ್ತಿದ್ದಾರೆ. ಇದಕ್ಕಾಗಿ ಪ್ರತಿದಿನ 22 ಲಕ್ಷ ಲೀಟರ್ ಶುದ್ಧ ಕುಡಿಯುವ ನೀರನ್ನು ಈ ಘಟಕಗಳ ಮೂಲಕ ನೀಡಲಾಗುತ್ತಿದೆ. ಯೋಜನೆಯ ಈ ಮಹತ್ವಕಾಂಕ್ಷೆ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಗಳೂ ಕೈ ಜೋಡಿಸಿವೆ.


ಶುದ್ಧಜಲ ಬಳಕೆಯ ಕುರಿತಂತೆ ಜನ ಸಾಮಾನ್ಯರಿಗೆ ಅರಿವಿನ ಕೊರತೆಯಿದೆ. ಇದಕ್ಕಾಗಿ ಜನವರಿ ತಿಂಗಳಾದ್ಯಂತ ಶುದ್ಧಜಲ ಜಾಗೃತಿ ಅಭಿಯಾನವನ್ನು ಶುದ್ಧಗಂಗಾ ಘಟಕಗಳಿರುವ ಪ್ರದೇಶದ ಜನರಿಗೆ ಆಯೋಜಿಸಲಾಗುತ್ತಿದೆ. ಶಾಲಾ ಮಕ್ಕಳಿಗೆ ಮಾಹಿತಿ, ಜಾಥಾ ಕಾರ್ಯಕ್ರಮ, ಕರಪತ್ರ ಹಂಚಿಕೆ, ಬೀದಿನಾಟಕ, ಸಾರ್ವಜನಿಕ ಮಾಹಿತಿ ಕಾರ್ಯಕ್ರಮ, ಒಕ್ಕೂಟ ಸಭೆಗಳು ಹಾಗೂ ಜ್ಞಾನವಿಕಾಸ ಕೇಂದ್ರಗಳಲ್ಲಿ ಮಾಹಿತಿ ಹಾಗೂ ಮನೆಮನೆಗೆ ತೆರಳಿ ನೋಂದಾವಣೆ ಮೊದಲಾದ 500 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಘಟಕ ಮೇಲ್ವಿಚಾರಕರು, ಪ್ರೇರಕರು, ಸ್ಥಳೀಯ ಕಾರ್ಯಕರ್ತರು ಹಾಗೂ ಪ್ರಗತಿಬಂಧು ಒಕ್ಕೂಟದ ಸದಸ್ಯರು ತೊಡಗಿಕೊಳ್ಳಲಿದ್ದಾರೆಯೆಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್ ರವರು ತಿಳಿಸಿರುತ್ತಾರೆ.

ಶುದ್ಧಜಲ ಅಭಿಯಾನದ ಕರಪತ್ರ ಬಿಡುಗಡೆ :
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಶುದ್ಧಜಲ ಅಭಿಯಾನದ ಕರಪತ್ರವನ್ನು ಜ.1 ರಂದು ಬಿಡುಗಡೆ ಮಾಡಿದರು.


ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್, ಮಾನ್ಯ ಮುಖ್ಯ ಹಣಕಾಸು ಅಧಿಕಾರಿಯಾದ ಶಾಂತರಾಮ ಪೈ, ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ, ಶುದ್ಧಗಂಗಾ/ಕೆರೆ ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಶಿವಾನಂದ ಆಚಾರ್ಯರವರು ಉಪಸ್ಥಿತರಿದ್ದರು.

Related posts

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya
error: Content is protected !!