30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಉಜಿರೆ : ಗ್ರಾಮೀಣ ಭಾಗದಲ್ಲಿರುವ ಉಜಿರೆ ಎಸ್.ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಅತ್ಯಂತ ಸಂಕೀರ್ಣವಾಗಿರುವ ಬಾಯಿಯ ಕ್ಯಾನ್ಸರ್‌ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮತ್ತೊಂದು ಸಾಧನೆ ಮಾಡಿದೆ.


ನಿರಂತರ ತಂಬಾಕು ಸೇವನೆಯ ಪರಿಣಾಮ ೩೭ ವರ್ಷ ಪ್ರಾಯದ ಮಹಿಳೆಯೊಬ್ಬರಿಗೆ ನಾಲಗೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ನೋವು ಮತ್ತು ಸುಡುವ ಸಂವೇದನೆಯ ಸಮಸ್ಯೆ ಉಂಟಾಗಿತ್ತು. ಇವರು ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಇಲ್ಲಿನ ವೈದ್ಯರು ರೋಗಿಯನ್ನು ಹೆಚ್ಚಿನ ಪರೀಕ್ಷೆಗೆ ಒಳಪಡಿಸಿದಾಗ ನಾಲಗೆಯ ಕ್ಯಾನ್ಸರ್ ಇರುವ ಬಗ್ಗೆ ಅನುಮಾನ ಉಂಟಾಗಿತ್ತು. ಬಯಾಪ್ಸಿ ವರದಿಯಲ್ಲಿ ನಾಲಗೆಯಲ್ಲಿ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು.

ಕುತ್ತಿಗೆಯ ಸಿಟಿ ಸ್ಕ್ಯಾನ್ ವರದಿ ಪರಿಶೀಲಿಸಿದಾಗ ಕ್ಯಾನ್ಸರ್ ಗೆಡ್ಡೆಗಳು ಕುತ್ತಿಗೆಗೂ ಹರಡಿದ್ದು, ಬಲಭಾಗದಲ್ಲಿ ಕುತ್ತಿಗೆಯ ಪ್ರಮುಖ ನಾಳಗಳನ್ನು ಸುತ್ತುವರಿದು, ನಾಳಗಳನ್ನು ಸಂಕುಚಿತಗೊಳಿಸಿರುವುದು ಕಂಡು ಬಂದಿತ್ತು. ರೋಗಿ ಮತ್ತು ಸಂಬಂಧಿಕರಿಗೆ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ಅಗತ್ಯತೆ ಮತ್ತು ಮುಂದಿನ ಚಿಕಿತ್ಸೆಯ ಬಗ್ಗೆ ಸಲಹೆ ನೀಡಲಾಯಿತು.


ಗೆಡ್ಡೆಯು ಪ್ರಮುಖ ನಾಳಗಳನ್ನು ಸುತ್ತುವರಿದಿದ್ದು, ನಾಳಗಳಿಗೆ ಹಾನಿಯಾಗದಂತೆ ಗೆಡ್ಡೆಯನ್ನು ತೆಗೆಯುವುದು ವೈದ್ಯರಿಗೆ ಅತ್ಯಂತ ಸವಾಲಿನದ್ದಾಗಿತ್ತು. ಬಲಭಾಗದ ಹೆಮಿಗ್ಲೋಸೆಕ್ಟಮಿ (ನಾಲಿಗೆಯ ಬಲಭಾಗದ ಅರ್ಧವನ್ನು ತೆಗೆಯುವುದು) ಜೊತೆಗೆ ಬಲಭಾಗದಲ್ಲಿ ಕುತ್ತಿಗೆಗೆ ಛೇದನ ಮಾಡಿ ಕುತ್ತಿಗೆಗೆ ಕ್ಯಾನ್ಸರ್ ಹರಡದಂತೆ ದುಗ್ದರಸ ಗ್ರಂಥಿಗಳನ್ನು ತೆಗೆಯುವ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಯಾವುದೇ ತೊಡಕುಗಳು ಇಲ್ಲದಂತೆ ನಾಳಗಳಿಗೆ ಹಾನಿಯಾಗದಂತೆ ೭ ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿ, ಯಶಸ್ವಿಯಾಗಿ ಗೆಡ್ಡೆಯನ್ನು ಹೊರತೆಗೆದು ಪ್ಲಾಸ್ಟಿಕ್ ಸರ್ಜರಿ ನಡೆಸಲಾಯಿತು.


ತಲೆ ಮತ್ತು ಕುತ್ತಿಗೆಯ ಆಂಕೊಸರ್ಜನ್, ಕಿವಿ-ಮೂಗು-ಗಂಟಲು ತಜ್ಞ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಡಾ| ರೋಹನ್ ದೀಕ್ಷಿತ್, ಪ್ಲಾಸ್ಟಿಕ್ ಮತ್ತು ಪುನರ್ ನಿರ್ಮಾಣ ಶಸ್ತ್ರಚಿಕಿತ್ಸಕ ಡಾ| ಕೃಷ್ಣ ಪ್ರಸಾದ್ ಶೆಟ್ಟಿ ಹಾಗೂ ಅರೆವಳಿಕೆ ತಜ್ಞ ಡಾ| ಸುಪ್ರೀತ್ ಆರ್. ಶೆಟ್ಟಿ ತಂಡ ಈ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ನಡೆಸಿದರು.


ಪ್ರಸ್ತುತ ರೋಗಿಯ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ರೋಗಿ ಮತ್ತು ಸಂಬಂಧಿಕರಲ್ಲಿ ಸಂತಸ ತಂದಿದೆ. ಡಾ| ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಇವರ ನಿರಂತರ ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಈಗಾಗಲೇ ಈ ಆಸ್ಪತ್ರೆಯ ನುರಿತ ತಜ್ಞವೈದ್ಯರ ತಂಡ ಹಲವಾರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ರೋಗಿಗಳ ವಿಶ್ವಾಸಕ್ಕೆ ಪಾತ್ರವಾಗಿದೆ. ಬೆನ್ನುಮೂಳೆ ಗೆಡ್ಡೆ ಶಸ್ತ್ರಚಿಕಿತ್ಸೆಯ ಬಳಿಕ ಬಹಳ ಮುಖ್ಯವಾದ ಡ್ಯೂರಲ್ ಹಾನಿಯನ್ನು ಸರಿಪಡಿಸುವ ಶಸ್ತ್ರಚಿಕಿತ್ಸೆ ಮಾಡುವಲ್ಲಿ ಇದುವರೆಗೆ ಎಲ್ಲಿಯೂ ಯಶಸ್ವಿಯಾಗಲಿಲ್ಲ. ಆದರೆ ನಮ್ಮ ಆಸ್ಪತ್ರೆಯಲ್ಲಿ ಕೆಲವೇ ತಿಂಗಳ ಹಿಂದೆ ನಡೆಸಲಾದ ಡ್ಯೂರಲ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಜಾಗತಿಕ ಮಟ್ಟದಲ್ಲಿ ಗುರುತಸಲ್ಪಟ್ಟಿತ್ತು. ಇದೀಗ ಅತ್ಯಂತ ಸಂಕೀರ್ಣವಾದ ಬಾಯಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಮಾಡುವಲ್ಲಿಯೂ ನಮ್ಮ ಆಸ್ಪತ್ರೆ ಯಶಸ್ವಿಯಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ತಿಳಿಸಿದರು.

Related posts

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya
error: Content is protected !!