23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

ಧರ್ಮಸ್ಥಳ : ಪ್ರಾಚೀನ ಕಾಲದ ನಾಣ್ಯಗಳು ನೋಡಲು ಸಿಗುವುದು ಅಪರೂಪ. ಅಂತಹ ನಾಣ್ಯಗಳನ್ನು ನೋಡುವುದರ ಜೊತೆಗೆ ಅವುಗಳ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾರೆ. ಶ್ರೀ ಹೆಗ್ಗಡೆಯವರ ಪುರಾತನ ವಸ್ತುಗಳ ಸಂಗ್ರಹಗಳ ಜೊತೆಗೆ ಮೂಡಿಗೆರೆಯ ಎಂ. ಎಲ್. ಅಶೋಕ್ ಅವರು ಸಂಗ್ರಹಿಸಿದ ಪ್ರಾಚೀನ ಕಾಲದ ನಾಣ್ಯಗಳ ಪ್ರದರ್ಶನವನ್ನು ಆಯೋಜಿಸಿದ್ದು ಶಾಲಾ ಮಕ್ಕಳಿಗೆ, ಆಸಕ್ತರಿಗೆ ನಾಣ್ಯಗಳ ಮೂಲಕ ಇತಿಹಾಸವನ್ನು ತಿಳಿದುಕೊಳ್ಳಲು ಇರುವ ಅವಕಾಶವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣರವರು ಹೇಳಿದರು.

ಅವರು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಫೆ. 17ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ಪ್ರಾಚೀನ ಕಾಲದ ನಾಣ್ಯ ಹಾಗೂ ಅಂಚೆ ಚೀಟಿಗಳ ವಿಶೇಷ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.


ನಾಣ್ಯಗಳ ಸಂಗ್ರಹಕಾರರಾದ ಮೂಡಿಗೆರೆಯ ಎಂ. ಎಲ್. ಅಶೋಕ್ ಮಾತನಾಡಿ ನನ್ನ ಪ್ರಾಚೀನ ವಸ್ತುಗಳ ಸಂಗ್ರಹಕ್ಕೆ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಮಂಜೂಷಾ ವಸ್ತು ಸಂಗ್ರಹಾಲಯವೇ ಪ್ರೇರಣೆ. ಅವಕಾಶ ಮಾಡಿಕೊಟ್ಟ ಪೂಜ್ಯರಿಗೆ ಹಾಗೂ ಮಂಜೂಷಾದ ಸಿಬಂದಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಾಚೀನ ಭಾರತದಿಂದ ಆರಂಭಗೊಂಡು ಮೊನ್ನೆ ಮೊನ್ನೆಯಷ್ಟೇ ಬಿಡುಗಡೆಗೊಂಡ ನಾಣ್ಯಗಳವರೆಗೆ ಸಂಗ್ರಹಿಸಲಾದ 1000ಕ್ಕೂ ಹೆಚ್ಚಿನ ನಾಣ್ಯಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ವಿವಿಧ ರಾಜ-ಮಹಾರಾಜರ ಕಾಲ, ಸ್ವಾತಂತ್ಯ್ರ ಪೂರ್ವ, ಸ್ವತಂತ್ರ ಭಾರತದ ಕಾಲದಿಂದ ಹಿಡಿದು ವಿಶೇಷ ಸಂದರ್ಭಗಳಲ್ಲಿ ಸರಕಾರವು ಬಿಡುಗಡೆಗೊಳಿಸಿದ ನಾಣ್ಯಗಳು, ಅಂಚೆ ಚೀಟಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಚಿನ್ನ, ಬೆಳ್ಳಿ, ತಾಮ್ರ ಹೀಗೆ ಹಲವು ರೀತಿಯ ನಾಣ್ಯಗಳನ್ನು ನೋಡಬಹುದು ಎಂದು ಹೇಳಿದರು.


ಧರ್ಮಸ್ಥಳದಲ್ಲಿರುವ ಮಂಜೂಷಾ ಮ್ಯೂಸಿಯಂನಲ್ಲಿ ವೀರೇಂದ್ರ ಹೆಗ್ಗಡೆಯವರ ಸಂಗ್ರಹಗಳ ಪ್ರದರ್ಶನದ ಜೊತೆಗೆ ವಿವಿಧ ಚಟುವಟಿಕೆ, ಕಾರ್ಯಾಗಾರಗಳ ಮೂಲಕ ಶಾಲಾ ಮಕ್ಕಳಿಗೆ, ಆಸಕ್ತರಿಗೆ ಪುರಾತನ ವಸ್ತುಗಳ ಮಾಹಿತಿ ಒದಗಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಸ್ತು ಸಂಗ್ರಹಾಲಯವು  ಜ್ಞಾನ ಹೆಚ್ಚಿಸುವುದರ ಜೊತೆಗೆ ಪ್ರಾಚೀನ ವಸ್ತುಗಳ ಬಗ್ಗೆ ಅರಿವು ಮೂಡಿಸಿ, ಇನ್ನಷ್ಟು ಆಸಕ್ತಿ, ಕುತೂಹಲ ಹೆಚ್ಚಲು ಪ್ರೇರಣೆಯಾಗಿವೆ ಎಂದು  ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ. ವೀರು ಶೆಟ್ಟಿ ಹೇಳಿದರು.


ಈ ಸಂದರ್ಭದಲ್ಲಿ ಮಂಜೂಷಾ ವಸ್ತು ಸಂಗ್ರಹಾಲಯದ ಉಪ ನಿರ್ದೇಶಕ ರಿತೇಶ್ ಶರ್ಮಾ ಎಸ್‌ಡಿಎಂ ಸಂಸ್ಕೃತಿ ಮತ್ತು ಸಂಶೋಧನಾ ಪ್ರತಿಷ್ಠಾನದ ಡಾ. ಪವನ್ ಕುಮಾರ್ ಹಾಗೂ ಇತರ ಸಿಬಂದಿಗಳು ಉಪಸ್ಥಿತರಿದ್ದರು.

Related posts

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya
error: Content is protected !!