ಕುತ್ಲೂರು: ಕುತ್ಲೂರಿನಲ್ಲಿ ಶಾಲಾ ಪಠ್ಯದ ಜೊತೆ ಪರಿಸರದ ಜೊತೆ ಬದುಕುವ ಜೀವನ ಶಿಕ್ಷಣ ನೀಡುತ್ತಿರುವ ಶಾಲೆ ರಾಜ್ಯಕ್ಕೆ ಮಾದರಿ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.
ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಾಭಾಗಿತ್ವದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮರಳಿ ಸರಕಾರಿ ಶಾಲೆಗೆ ಮಕ್ಕಳನ್ನು ಸೇರಿಸೋಣ ಅಭಿಯಾನ ಹಾಗೂ ಮಕ್ಕಳು ಮತ್ತು ಶಿಕ್ಷಕರು ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ಜೊತೆ ಸಂವಾದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ, ಕುತ್ಲೂರಿನಲ್ಲಿ ಶಾಲೆ ವಿಶ್ವ ವಿದ್ಯಾನಿಲಯದ ರೀತಿ ಕಾರ್ಯನಿರ್ವಹಿಸುತ್ತಿದೆ. ನಾವು ಪಡೆಯುವ ಪ್ರತಿ ಜ್ಞಾನವೇ ಶಿಕ್ಷಣ.ಶಾಲೆಯಲ್ಲಿ ನಿರ್ಮಿಸಲಾದ ಕೈ ತೋಟ ಜೀವನದ ಅನುಭವ ನೀಡುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕುತ್ಲೂರು ಶಾಲೆಯ ಅಭಿವೃದ್ಧಿಗೆ ಶಾಲೆಯವರು ಸಲ್ಲಿಸಿದ ಮನವಿಯ ಪ್ರಕಾರ ನನ್ನಿಂದಾಗುವ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.
ಈ ಸರಕಾರಿ ಶಾಲೆಯಲ್ಲಿ ಸಾವಯವ ತರಕಾರಿ ತೋಟ, ಅಡಿಕೆ ತೋಟ ನೋಡಿ ತುಂಬಾ ಖುಷಿಯಾಗಿದೆ ಈ ಶಾಲೆ ರಾಜ್ಯಕ್ಕೆ ಮಾದರಿಯಾಗಿದೆ..ವಿದ್ಯಾರ್ಥಿಗಳ ಚಟುವಟಿಕಗಳನ್ನು ಕಂಡು ಖುಷಿಯಾಗಿದೆ.ವಿದ್ಯಾರ್ಥಿಗಳ ಅಧ್ಯಯನ ಕ್ಕೆ ಅನುಕೂಲ ವಾಗುವ ದೃಷ್ಟಿಯಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವಾಗ ಈ ಶಾಲೆಗೆ 2 ಕಂಪ್ಯೂಟರ್, ಸ್ಮಾರ್ಟ್ ಕ್ಲಾಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಟಿ ಶರ್ಟ್, ಪ್ಯಾಂಟ್ ತನ್ನ ವೈಯುಕ್ತಿಕ ಕೊಡುಗೆಯಾಗಿ ನೀಡಲಾಗುವುದು. ರಾಜ್ಯ ಸರಕಾರದಿಂದಲೂ ಅನುದಾನ ಒದಗಿಸಲಾಗುವುದು ಎಂದು ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಮಾತನಾಡುತ್ತಾ, ಆರಂಭದಲ್ಲಿ ಮಕ್ಕಳ ಸಂಖ್ಯೆ ೩೮ ಇಳಿಮುಖ ವಾಗಿದ್ದ ಸಂಖ್ಯೆ 83 ಕ್ಕೆ ಏರಿಕೆಯಾಗಿದೆ. ಪತ್ರಕರ್ತರ ಗ್ರಾಮವಾಸ್ತವ್ಯ ಶಾಲಾ ಕೈ ತೋಟದ ಜೊತೆ 400 ಅಡಿಕೆ ಗಿಡ 50 ತೆಂಗಿನ ಸಸಿ ನೆಟ್ಟು ಬೆಳೆಸಿದ್ದೇವೆ.ಪತ್ರಕರ್ತರ ಗ್ರಾಮವಾಸ್ತವ್ಯ ಈ ನಿಟ್ಟಿನಲ್ಲಿ ಪ್ರೇರಣೆ ಯಾಗಿದೆ.ಖಾಸಗಿ ಶಾಲೆಯಲ್ಲಿ ವಾಹನ ವ್ಯವಸ್ಥೆ ಇರುವಂತೆ ಕುತ್ಲೂರು ಶಾಲಾ ಮಕ್ಕಳಿಗೆ ಎರಡು ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮಾಧ್ಯಮ ಸಲಹೆಗಾರರಿಗೆ ತರಕಾರಿ ಸಮರ್ಪಣೆ
ಈ ಶಾಲೆಯ ಸಾವಯವ ತರಕಾರಿ ತೋಟದಲ್ಲಿ ಬೆಳೆದ 10 ಕೆಜಿ ಸೌತೆ ಹಾಗೂ 3 ಕೆಜಿ ಬೆಂಡೆ ಕಾಯಿಯನ್ನು ವಿದ್ಯಾರ್ಥಿಗಳು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಅವರಿಗೆ ಹಸ್ತಾಂತರಿಸಿದರು. ಮುಂದಿನ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಶಾಲೆಯ ಸಾವಯವ ತೋಟದಲ್ಲಿ ಬೆಳೆದ ತರಕಾರಿಯನ್ನು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ಕೃಷ್ಣಗೆ ತೆರಳಿ ವಿದ್ಯಾರ್ಥಿಗಳು ಹಸ್ತಾಂತರ ಮಾಡಲಿದ್ದಾರೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ತಿಳಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ,ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ,ಮುಖ್ಯ ಮಂತ್ರಿಗಳ ಮಾಜಿ ಸಲಹೆಗಾರ ಶಶಿಕಾಂತ ಅರಿಗ, ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥ ಮಿಕ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶ್ವೇತಾ ಜಗದೀಶ್ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಜ್ಯೋತಿ ಸ್ವಾಗತಿಸಿದರು. ಶಿಕ್ಷಕಿ ಸುಶ್ಮಾ ವಂದಿಸಿದರು.ಶಿಕ್ಷಕ ರಾಜಾ ಕಳಸಪ್ಪನವರ್ ಕಾರ್ಯಕ್ರಮ ನಿರೂಪಿಸಿದರು.