ಪತ್ರಿಕಾಗೋಷ್ಠಿ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಕುತ್ಲುರು ಸರಕಾರಿ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಾಲಾ ಆರಂಭೋತ್ಸವ ಮೇ ೩೦ ರಂದು ನಡೆಯಲಿದೆ. ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗರಾರ ಕೆ.ವಿ ಪ್ರಭಾಕರ್ ನೆರವೇರಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹೇಳಿದರು.

ಅವರು ಮೇ 26ರಂದು ಬೆಳ್ತಂಗಡಿ ಪತ್ರಕರ್ತರ ಸಂಘದಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ. ವಿ ಪ್ರಭಾಕರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಲಕ 2 ಕಂಪ್ಯೂಟರ್ ಹಾಗೂ ಪ್ರಾಜೆಕ್ಟ್ರರ್ ನೀಡಿದ್ದಾರೆ. ಶಾಲಾ ವಿದ್ಯಾರ್ಥಿಗಳಿಗೆ ಪ್ಯಾಂಟ್, ಟೀ ಶರ್ಟ್ ಹಾಗೂ ಸ್ಕೂಲ್ ಬ್ಯಾಗ್ಗಳನ್ನು ವೈಯಕ್ತಿಕ ಕೊಡುಗೆ ನೀಡಿದ್ದಾರೆ. ಅಲ್ಲದೆ ಶಾಲೆಗೆ ಪೈಂಟ್ ವ್ಯವಸ್ಥೆ ಮಾಡಿದ್ದಾರೆ. ಶಾಲಾ ಮಕ್ಕಳಿಗೆ ಶಾಲೆಗೆ ಬಂದು ಹೋಗಲು ವಾಹನ ವ್ಯವಸ್ಥೆ ಮಾಡಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಈ ಸರಕಾರಿ ಶಾಲೆಗೆ ಭರಪೂರ ಕೊಡುಗೆ ನೀಡಿರುವ ಕೆ.ವಿ ಪ್ರಭಾಕರ್ ಅವರನ್ನು ಎಲ್ಲರ ಪರವಾಗಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸನ್ಮಾನಿಸಲಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಎಂ ಆರ್ ಪಿ ಎಲ್ ಸಿ ಎಸ್ ಆರ್ ನಿಧಿಯಿಂದ ೮ ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ ಹಾಗೂ 8 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಕೊಠಡಿಗಳಿಗೆ ಹಾಕಿದ ಟೈಲ್ಸ್ ಇದರ ಉದ್ಘಾಟನೆಯನ್ನು ಎಂ ಆರ್ ಪಿ ಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ನೆರವೇರಲಿಸಲಿದ್ದಾರೆ. ಶಾಲಾ ಪೈಂಟಿಂಗ್ ವ್ಯವಸ್ಥೆಯನ್ನು ದಕ್ಷಿಣ ಕನ್ನಡ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ಉದ್ಘಾಟಿಸಲಿದ್ದಾರೆ. ಕಂಪ್ಯೂಟರ್ ಕೊಠಡಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಉದ್ಘಾಟಿಸಲಿದ್ದಾರೆ. ಶಾಲಾ ನಾಮ ಫಲಕವನ್ನು ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್ ಉದ್ಘಾಟಿಸಲಿದ್ದಾರೆ. ಹಸಿರೇ ಉಸಿರು ಕಾರ್ಯಕ್ರಮವನ್ನು ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ವೀರು ಶೆಟ್ಟಿ ನೆರವೇರಿಸಲಿದ್ದಾರೆ. ಎಲೆಕ್ಟ್ರಿಕಲ್ ವ್ಯವಸ್ಥೆ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಶಾಲೆಯ ಕೊಠಡಿಗಳಲ್ಲಿ ಪ್ರೇಕ್ಷಣಿಯ ಸ್ಥಳಗಳ ಕುರಿತು, ಪರಿಸರ ಕುರಿತು ಚಿತ್ರಗಳನ್ನು ಬಿಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 5 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲೆಗೆ ಪೈಂಟಿಂಗ್ ಮಾಡಲಾಗಿದೆ ಎಂದು ಕುತ್ಲೂರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಈ ಸಂದರ್ಭ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಜಿಲ್ಲಾ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ಉಪಸ್ಥಿತರಿದ್ದರು.