ಪೆರೋಡಿತ್ತಾಯಕಟ್ಟೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜೂ.5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮುಸ್ತಫಾ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಮುಸ್ತಾಫರವರು ಅರಣ್ಯ ಇಲಾಖೆಯಿಂದ ತಾವೇ ಸ್ವತಃ ಗಿಡಗಳನ್ನು ತಂದು ಕೊಡುವ ವ್ಯವಸ್ಥೆಯನ್ನು ಮಾಡಿರುತ್ತಾರೆ.
ಶಾಲೆಯ ಕೆಲವು ವಿದ್ಯಾರ್ಥಿಗಳು ತೆಂಗಿನ ಸಸಿಗಳನ್ನು, ಹಣ್ಣು ಹಂಪಲಿನ ಗಿಡಗಳನ್ನು ಮನೆಯಿಂದ ತಂದು ಶಾಲಾ ಆವರಣದೊಳಗೆ ನೆಡುವುದರೊಂದಿಗೆ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಬಹುಮಾನ ನೀಡಿ ಅಭಿನಂದಿಸಲಾಯಿತು. ಶಾಲಾ ವಿಜ್ಞಾನ ಶಿಕ್ಷಕಿ ದೇವಿಕಾ ಪರಿಸರ ಸಂರಕ್ಷಣೆ ಮತ್ತು ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಪಾಯ್ಸ್ ಹಾಗೂ ಅಧ್ಯಾಪಕ ವೃಂದದವರು ಕಾರ್ಯಕ್ರಮಕ್ಕೆ ಸಹಕರಿಸಿದರು.