
ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ, ಕಳೆದ 3 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ರಾಗಿ ಪದೋನ್ನತಿ ಹೊಂದಿ ಸೇವಾ ನಿವೃತ್ತಿ ಪಡೆದು,ಬದುಕಿನ 60 ಸಂವತ್ಸರಗಳನ್ನು ಯಶಸ್ವಿಯಾಗಿ ಪೂರೈಸಿರುವ ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತದಾರರು, ಕೊಡುಗೈ ದಾನಿ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೆಗಳನ್ನು ನೀಡಿರುವ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ ಮತ್ತು ಷಷ್ಠ್ಯಬ್ಧ ಸಂಭ್ರಮ ಹಾಗೂ ಶ್ರೀ ಸತ್ಯದೇವತೆ ದೈವಸ್ಥಾನದ ವತಿಯಿಂದ 22ನೇ ವರ್ಷದ ಪುಸ್ತಕ ವಿತರಣೆ (7000 ವಿದ್ಯಾರ್ಥಿಗಳಿಗೆ) ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂ.14ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠದ ಪರಮಪೂಜ್ಯ ಭಾರತಭೂಷಣ ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಹಾಗೂ ಕಾಸರಗೋಡು ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಅಧ್ಯಕ್ಷತೆಯನ್ನು ವಹಿಸಿದ್ದರು.

ಮಂಗಳೂರು ಲೋಕಸಭಾ ಸದಸ್ಯ ಕ್ಯಾ| ಬ್ರಿಜೇಶ್ ಚೌಟ ಕಾರ್ಯಕ್ರಮ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಂಗಳೂರು ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್, ವಿಧಾನ ಪರಿಷತ್ ಸದಸ್ಯರುಗಳಾದ ಕೆ. ಪ್ರತಾಪಸಿಂಹ ನಾಯಕ್,ಮಂಜುನಾಥ ಭಂಡಾರಿ,ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಉಪಸ್ಥಿತರಿದ್ದರು.
ಎಸ್.ಎಸ್.ಎಲ್.ಸಿ 625 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿ ಸಾನಿಧ್ಯ ರಾವ್ ಅವರನ್ನು ಸನ್ಮಾನಿಸಲಾಯಿತು.
ನಾಗರಿಕ ಸನ್ಮಾನ ಸಮಿತಿ ಅಧ್ಯಕ್ಷ ಎಂ.ಗಂಗಾಧರ ಮಿತ್ತಮಾರು ಸ್ವಾಗತಿಸಿದರು.ಸಂಚಾಲಕ ದೇವೇಂದ್ರ ಹೆಗ್ಡೆ ಕೊಕ್ರಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ನೊಚ್ಚ ಸಹಕರಿಸಿದರು.