ಬೆಳ್ತಂಗಡಿ: ಯುವ ಜನಾಂಗ ವಿವಿಧ ಆಕರ್ಷಣೆಗೆ ಒಳಗಾಗಿ ಮಾದಕ ದ್ರವ್ಯಗಳಿಗೆ ಬಲಿಯಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿದೆ ಎಂದು ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ಪ್ರಶಾಂತ್ ಶೆಟ್ಟಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ರೋವರ್ಸ್ – ರೇಂಜರ್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ನಡೆದ ವಿಶ್ವ ತಂಬಾಕು ದಿನ ಹಾಗೂ ವಿಶ್ವ ಮಾದಕ ದ್ರವ್ಯ ನಿರ್ಮೂಲನ ದಿನದ ಅಂಗವಾಗಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಯುವಕ ಯುವತಿಯರು ಅನಗತ್ಯ ಚಿಂತೆ, ಒತ್ತಡ ನಿವಾರಣೆಯ ನೆಪದಲ್ಲಿ ತಮಗೆ ಅರಿವೇ ಇಲ್ಲದೆ ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗುತ್ತಿದ್ದು ಹೃದಯ ಸಂಬಂಧಿ ಕಾಯಿಲೆಗಳು ಅಲ್ಲದೆ ಇನ್ನಿತರ ರೋಗಗಳಿಗೆ ತುತ್ತಾಗುತ್ತಿರುವುದು ದುರಂತವಾಗಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಮತ್ತು ಸಮಾಜವನ್ನು ಉತ್ತಮವಾಗಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಸಾರ್ವಜನಿಕರು ಮಾದಕ ದ್ರವ್ಯಗಳ ಅಕ್ರಮ ಸಾಗಣೆಯ ಬಗ್ಗೆ ಜಾಗೃತರಾಗಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ರೇಂಜರ್ಸ್ ಲೀಡರ್ ಶ್ರೀಮತಿ ರಕ್ಷಾ ಉಪಸ್ಥಿತರಿದ್ದರು.
ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶ್ರೀಮತಿ ಅನುರಾಧ ಕೆ ರಾವ್ ಸ್ವಾಗತಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಧನ್ಯವಾದವಿತ್ತರು. ನಿಶ್ಮಿತಾ ಕೆ ಕಾರ್ಯಕ್ರಮ ನಿರೂಪಿಸಿದರು.











