22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿವಿದೇಶ

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು, ಕಾರ್ಮಿಕರು ಹಾಗೂ ಈ ಉದ್ಯಮವನ್ನು ನಂಬಿಕೊಂಡಿರುವ ಲಕ್ಷಾಂತರ ಕುಟುಂಬಗಳ ಹಿತ ಕಾಪಾಡುವುದಕ್ಕೆ ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ಕ್ರಮಗಳಿಂದಾಗಿ ದಕ್ಷಿಣ ಕನ್ನಡದಲ್ಲಿ ಈಗ ಕಟ್ಟಡ ಕಾಮಗಾರಿಗಳಿಗೆ ಕೆಂಪುಕಲ್ಲು-ಮರಳು ಸಿಗದಂತೆ ಆಗಿದೆ. ಜಿಲ್ಲೆಯಲ್ಲಿ ಈಗಾಗಲೇ ನಿರ್ಮಾಣ ಕೆಲಸಗಳು ಬಹುತೇಕ ಸ್ಥಗಿತಗೊಂಡು ಅದನ್ನು ನೇರ ಹಾಗೂ ಪರೋಕ್ಷವಾಗಿ ನಂಬಿಕೊಂಡಿರುವ ಕಾರ್ಮಿಕರು, ವ್ಯಾಪಾರಸ್ಥರು, ಸರಕು ಸಾಗಾಣೆದಾರರು, ಉದ್ಯಮದವರು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿರುವುದಕ್ಕೆ ಈ ಕಾಂಗ್ರೆಸ್‌ ಸರ್ಕಾರವೇ ನೇರ ಹೊಣೆ. ಕೆಂಪುಕಲ್ಲು-ಮರಳು ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದರೂ ಇಲ್ಲಿವರೆಗೆ , ಜಿಲ್ಲೆಯ ಉಸ್ತುವಾರಿ ಸಚಿವರಾಗಲಿ, ಗಣಿ ಸಚಿವರಾಗಲಿ ಅಥವಾ ಸಂಬಂಧಪಟ್ಟ ಇಲಾಖೆಯವರಾಗಲಿ ತತ್‌ಕ್ಷಣಕ್ಕೆ ಸ್ಪಂದಿಸುವ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರವು ಕೆಂಪು ಕಲ್ಲಿಗೆ ದುಬಾರಿ ರಾಯಲ್ಟಿ ವಿಧಿಸುವ ಮೂಲಕ ಜನಸಾಮಾನ್ಯರು ಮನೆ ಕಟ್ಟುವುದಕ್ಕೆ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಮಾಡಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಕೆಂಪುಕಲ್ಲಿಗೆ ಅತ್ಯಂತ ಕಡಿಮೆ ರಾಯಲ್ಟಿ ವಿಧಿಸುತ್ತಿದ್ದರೆ, ನಮ್ಮಲ್ಲಿ ದುಬಾರಿ ರಾಜಧನ ವಸೂಲಿ ಮಾಡಲಾಗುತ್ತಿದೆ. ಕರಾವಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದು, ಎರಡು ವರ್ಷ ಕಳೆದರೂ ಕೆಂಪುಗಲ್ಲು ಹಾಗೂ ಮರಳು ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್‌ ಸರ್ಕಾರವು ಅಸಂಬದ್ಧ ತೀರ್ಮಾನಗಳನ್ನು ತೆಗೆದುಕೊಂಡು ಕೆಂಪುಕಲ್ಲಿನ ಕೃತಕ ಅಭಾವನ್ನು ಸೃಷ್ಟಿಸಿ ಜನಸಾಮಾನ್ಯರು ಹಾಗೂ ಕಾರ್ಮಿಕರ ಮೇಲೆ ಬರೆ ಎಳೆಯುತ್ತಿದೆ. ಹೀಗಾಗಿ ಸರ್ಕಾರವು ಈ ಗಂಭೀರ ಸಮಸ್ಯೆಯನ್ನು ಪರಿಶೀಲಿಸಿ ವಾಸ್ತವಿಕ ನೆಲೆಯಲ್ಲಿ ನೀತಿ- ನಿಯಮಗಳನ್ನು ರೂಪಿಸಬೇಕು ಎಂದು ಕ್ಯಾ. ಚೌಟ ಆಗ್ರಹಿಸಿದ್ದಾರೆ.

ಕೆಂಪುಕಲ್ಲು ಹಾಗೂ ಮರಳು ಸಮಸ್ಯೆ ಬಗ್ಗೆ ಬಿಜೆಪಿ ದಕ್ಷಿಣ ಕನ್ನಡ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಿರುವುದು ಮಾತ್ರವಲ್ಲ, ಕೆಡಿಪಿ ಸೇರಿದಂತೆ ಅನೇಕ ಸಭೆಗಳಲ್ಲಿ ಕೆಂಪು ಕಲ್ಲು ಮರಳು ಸಮಸ್ಯೆ ಬಗ್ಗೆ ದ್ವನಿಎತ್ತುತ್ತಿದೆ. ಹಲವು ಸಂಘಟನೆಗಳು ಕೂಡಾ ಸಮಸ್ಯೆಯ ಗಂಭೀರತೆಯನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಿದೆ. ಇಷ್ಟಾಗಿಯೂ ಈ ಸಮಸ್ಯೆ ಬಗೆಹರಿಸುವುದಕ್ಕೆ ಕಾಂಗ್ರೆಸ್‌ ಸರ್ಕಾರ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸದಿರುವುದನ್ನು ನೋಡಿದರೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಜ್ವಲಂತ ವಿಚಾರಗಳ ಕಡೆಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿರುವುದು ಸ್ಪಷ್ಟವಾಗುತ್ತದೆ. ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದ ಉಸ್ತುವಾರಿ ಸಚಿವರು ಹೇಳಿಕೆ ನೀಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಈ ಬಗ್ಗೆ ಗಣಿ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದರೆ ಸರ್ಕಾರದ ಮಟ್ಟದಲ್ಲಿಯೇ ನಿಯಮ ಸಡಿಲಿಕೆಯಾಗುವವರೆಗೆ ನಾವೇನೂ ಮಾಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹೀಗಿರುವಾಗ, ಸರ್ಕಾರವು ಈ ಕೂಡಲೇ ಎಚ್ಚೆತ್ತುಕೊಂಡು ಕೆಂಪುಕಲ್ಲು, ಮರಳು ಪೂರೈಕೆಗೆ ಅಡ್ಡಗಾಲು ಹಾಕುವ ಬದಲು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿಯು ಕಾಂಗ್ರೆಸ್‌ ಸರ್ಕಾರ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ಕ್ರಮಗಳನ್ನು ಖಂಡಿಸಿ ಮತ್ತಷ್ಟು ತೀವ್ರ ರೀತಿಯ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Related posts

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya
error: Content is protected !!