ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕ, ಕೆ.ವಿ.ಜಿ ದಂತವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯ, ಭಾರತೀಯ ದಂತವೈದ್ಯಕೀಯ ಸಂಘ, ಪುತ್ತೂರು ಮತ್ತು ರೋಟರಿ ಕ್ಲಬ್, ಬೆಳ್ತಂಗಡಿ ಇವರ ಜಂಟಿ ಸಹಭಾಗಿತ್ವದೊಂದಿಗೆ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ರೊಟರೀ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೆ.ವಿ.ಜಿ ದಂತವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವಸಡು ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ.ದಯಾಕರ್ ಮಾತನಾಡಿ, ಮುಖದಲ್ಲಿರುವ ಹಲ್ಲು ನಮ್ಮ ಸೌಂದರ್ಯಕ್ಕೆ, ಆಹಾರವನ್ನು ಜಗಿಯುವುದಕ್ಕೆ ಮಾತ್ರವಲ್ಲದೆ ನಮ್ಮ ಜೀವನದಲ್ಲಿ ಬಹು ಮುಖ್ಯ ಪಾತ್ರವನ್ನ ವಹಿಸುತ್ತದೆ, ಹಲ್ಲು ಮತ್ತು ವಸಡಿನ ಆರೋಗ್ಯಕ್ಕೆ ಉತ್ತಮ ಆಹಾರ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಭಾರತೀಯ ದಂತವೈದ್ಯಕೀಯ ಸಂಘ ಅಧ್ಯಕ್ಷ ಡಾ.ಆಶಾ ರಾಘವೇಂದ್ರ ಭಾಗವಹಿಸಿ, ಕಾರ್ಯಕ್ರಮಕ್ಕೆ ಶುಭ ನುಡಿದರು.
ಕಾಲೇಜಿನ ಪ್ರಾಂಶುಪಾಲ ಸಂತೋಷ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ., ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಪ್ರಕಾಶ್ ಭಾಗವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಸುಮಾರು 180 ಜನರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.











