ಬೆಳ್ತಂಗಡಿ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ನಿರಂತರ ಪ್ರಕಟವಾಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳಿಗೆ ತೀವ್ರ ನೋವಾಗಿದೆ. ಭಯ ಮತ್ತು ಗೊಂದಲದ ವಾತಾವರಣ ಉಂಟಾಗಿದೆ. ಆದುದರಿಂದ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲು ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.
ಅವರು ಭಾನುವಾರ ತಮ್ಮ ಸಾವಿರಾರು ಅಭಿಮಾನಿಗಳೊಂದಿಗೆ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಅಮೃತವರ್ಷಿಣಿ ಸಭಾಭವನದಲ್ಲಿ ಮಾತನಾಡಿದರು. ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳೇ ಧರ್ಮಸ್ಥಳದ ಅಪಾರ ಹಾಗೂ ಅಮೂಲ್ಯ ಸಂಪತ್ತು ಮತ್ತು ಶ್ರೀರಕ್ಷೆಯಾಗಿದೆ ಎಂದು ಹೆಗ್ಗಡೆಯವರು ಹೇಳಿದರು. ನಂಬಿದವರಿಗೆ ಇಂಬು ಕೊಡುವ ಧರ್ಮಸ್ಥಳದಲ್ಲಿ “ಮಾತು ಬಿಡ ಮಂಜುನಾಥ” ಎಂಬ ಮಾತು ಚಿರಪರಿಚಿತವಾಗಿದೆ. ಸತ್ಯ, ಧರ್ಮ, ನ್ಯಾಯ, ನೀತಿ ನಿತ್ಯವೂ ನೆಲೆನಿಂತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳ. ಧರ್ಮಸ್ಥಳದಲ್ಲಿ ಯಾವುದೇ ತಪ್ಪು ಅಥವಾ ಅಹಿತಕರ ಘಟನೆ ನಡೆಯದಂತೆ ಸದಾ ಎಚ್ಚರಿಕೆ ಹಾಗೂ ಮುಂಜಾಗರೂಕತೆ ವಹಿಸುತ್ತಿರುವುದಾಗಿ ಹೆಗ್ಗಡೆಯವರು ಸ್ಪಷ್ಟಪಡಿಸಿದರು.
ಡಿ. ಸುರೇಂದ್ರ ಕುಮಾರ್ ಮತ್ತು ಶಾಸಕರುಗಳಾದ ಜಿ.ಡಿ. ಹರೀಶ್ ಗೌಡ, ಹುಣಸೂರು, ಮಂಜು, ಅರಕಲಗೂಡು, ಸ್ವರೂಪ್ ಹಾಸನ, ಮಲ್ಲೇಶ್ ಬಾಬು, ಕೋಲಾರ, ವಿಧಾನಪರಿಷತ್ ಸದಸ್ಯ ಭೋಜೇಗೌಡ ಮತ್ತು ಮಾಜಿ ಶಾಸಕ ಕೆ. ಮಹಾದೇವ ಮೊದಲಾದವರು ಉಪಸ್ಥಿತರಿದ್ದರು.











