ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆಯುವ ಭಜನಾ ಕಮ್ಮಟದಲ್ಲಿ ಭಜನೆಯ ತರಬೇತಿ ನೀಡಲಾಗುತ್ತದೆ. ಇದರೊಂದಿಗೆ ಮನೆ-ಮನದಲ್ಲಿ ಬದಲಾವಣೆ ತರುವ ಕೆಲಸ ನಿರಂತರವಾಗಿದೆ. ಊರುಗಳಲ್ಲಿ ನಗರ ಭಜನೆ ಎಂಬ ಹೊಸ ಕಲ್ಪನೆ ಉದಯವಾಗಲು ಭಜನ ಕಮ್ಮಟ ಪ್ರೇರಣೆಯಾಯಿತು. ಮನೆ-ಮನೆಗೆ ತೆರಳಿ ನಗರ ಭಜನೆಯನ್ನು ಅತ್ಯುತ್ತಮ ರೀತಿಯಲ್ಲಿ ಮಾಡಲು ಗ್ರಾಮದಲ್ಲಿರುವ ಭಜನಾ ಮಂಡಳಿಗಳಿಗೆ ಕಮ್ಮಟಗಳ ಮೂಲಕ ತರಬೇತಿ ನೀಡಲಾಗುತ್ತಿದೆ. ಭಜನೆಯಂತಹ ಆಧ್ಯಾತ್ಮಿಕ ಕಾರ್ಯಕ್ರಮದಿಂದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ೨೭ನೇ ವರ್ಷದ ಭಜನಾ ಕಮ್ಮಟ ಕಾರ್ಯಾಗಾರವು ಸೆ.೧೪ರಿಂದ ಸೆ.೨೧ರವರೆಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.
ಸೆ.೧೪ ರಂದು ೨೭ನೇ ವರ್ಷದ ಭಜನಾ ಕಮ್ಮಟದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ. ಉದ್ಘಾಟನೆಯನ್ನು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ನೇರವೇರಿಸಲಿದ್ದಾರೆ. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದಿವ್ಯ ಉಪಸ್ಥಿತಿಯಲ್ಲಿರಲಿದ್ದಾರೆ. ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಪಾಧ್ಯಕ್ಷರಾದ ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆಯವರು, ಡಿ.ಹರ್ಷೇಂದ್ರ ಕುಮಾರ್ ಭಾಗವಹಿಸಲಿದ್ದಾರೆ.
ಸೆ.೨೧ ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಕಾರ್ಕಳ ಶಾಸಕರಾದ ವಿ.ಸುನೀಲ್ ಕುಮಾರ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭಾಗವಹಿಸಲಿದ್ದಾರೆ.
ಭಜನಾ ಕಮ್ಮಟ-೨೦೨೫ ಇದರ ಕಾರ್ಯದರ್ಶಿ ಎ.ವಿ ಶೆಟ್ಟಿ, ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್, ಉಪಾಧ್ಯಕ್ಷರಾದ ರಾಜೇಂದ್ರ ಕುಮಾರ್ ಬಸ್ರೂರು ಹಾಗೂ ಪದಾಧಿಕಾರಿಗಳು ಪೂರ್ವ ತಯಾರಿಕೆಯಲ್ಲಿ ತೊಡಗಿದ್ದಾರೆ.
ಸೆ.೨೧: ಭಜನೋತ್ಸವ : ಸೆ. ೨೧ ರಂದು ಬೆಳಿಗ್ಗೆ ಗಂಟೆ ೯.೩೦ಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಆಯ್ದ ಭಜನಾ ಮಂಡಳಿಗಳಿAದ ಆಗಮಿಸುವ ಸುಮಾರು ೪೦೦ ಭಜನಾ ತಂಡಗಳ ೬೦೦೦ ಭಜನಾ ಪಟುಗಳಿಂದ ಶೋಭಾಯಾತ್ರೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಭಜನೆಯೊಂದಿಗೆ ನೃತ್ಯ ಭಜನೆ ನಡೆಯಲಿದೆ.
ನಗರ ಸಂಕೀರ್ತನೆ : ಭಜನಾ ತರಬೇತಿ ಕಮ್ಮಟದ ಸಂದರ್ಭ ಶಿಬಿರಾರ್ಥಿಗಳಿಂದ ಪ್ರತಿದಿನ ಸಂಜೆ ಗಂಟೆ ೫:೩೦ರಿಂದ ನಗರ ಭಜನೆ ನಡೆಯಲಿದೆ.ರಾತ್ರಿ ೭.೩೦ ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಧ್ಯಾಹ್ನ ೧೨ರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕಾರ್ಯಾಗಾರದಲ್ಲಿ ಹಲವಾರು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ.











