
ಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿರುವ ಷಡ್ಯಂತ್ರಿಗಳ ವಿರುದ್ಧ ‘ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ ‘ ಸೆ.14ರಂದು ಜರುಗಿತು.

ಮಧ್ಯಾಹ್ನ 12ಗಂಟೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲ ವಿಧದ ಸಹಕಾರಿ ಸಂಘಗಳ ಪದಾಧಿಕಾರಿಗಳು, ಸದಸ್ಯರು ಸಾವಿರಾರು ಮಂದಿ
ಉಜಿರೆಯಲ್ಲಿ ಒಟ್ಟು ಸೇರಿ ಧರ್ಮಸ್ಥಳಕ್ಕೆ ಯಾತ್ರೆ ನಡೆಸಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 1500ಕ್ಕೂ ಅಧಿಕ ಸಹಕಾರಿ ಸಂಘಗಳಿದ್ದು, ಪ್ರತಿಯೊಂದು ಸಂಘಗಳಿಂದ ತಲಾ 2 ವಾಹನಗಳಲ್ಲಿ
ಮೂರು ಸಾವಿರಕ್ಕೂ ಮಿಕ್ಕಿ ವಾಹನಗಳ ಜಾಥಾದಲ್ಲಿ
ಕ್ಷೇತ್ರಕ್ಕೆ ಆಗಮಿಸಿದರು.

ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಧರ್ಮಕ್ಷೇತ್ರಕ್ಕೆ ಅಪಚಾರವೆಸಗುವ ಷಡ್ಯಂತ್ರಿಗಳಿಗೆ ಸ್ಪಷ್ಟ ಸಂದೇಶ ನೀಡುವ ಚಾರಿತ್ರಿಕ ಯಾತ್ರೆಯಾಗಿ ಧರ್ಮಜಾಗೃತಿ ಯಾತ್ರೆ ನಡೆಯಿತು.
ಧರ್ಮಸ್ಥಳ ಮಹಾದ್ವಾರದಿಂದ ದೇವಸ್ಥಾನ ತನಕ ಮೆರವಣಿಗೆ ಸಾಗಿತು. ಬಳಿಕ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಂದೇಶ ನೀಡಿ, ಭಕ್ತರು ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ, ಗೌರವ ಮತ್ತು ಅಭಿಮಾನ ತಮಗೆ ಹೆಚ್ಚಿನ ಉತ್ಸಾಹ ಮತ್ತು ಭರವಸೆ ಮೂಡಿಸಿದೆ.

ಸಹಕಾರಿ ಕ್ಷೇತ್ರವನ್ನು ತಮ್ಮ ಮಾರ್ಗದರ್ಶಿತ್ವ ಮತ್ತು ನಾಯಕತ್ವದೊಂದಿಗೆ ಜನಪ್ರಿಯಗೊಳಿಸಿದ ರಾಜೇಂದ್ರ ಕುಮಾರ್ ಅವರ ಸೇವೆ, ಸಾಧನೆಯನ್ನು ಶ್ಲಾಘಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ,
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಯೆ ಆಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಯನ್ನು ಖಂಡಿಸಿ, ಜಾತಿ-ಮತ, ಪಕ್ಷ ಬೇಧ ಮರೆತು ಸರ್ವಸಹಕಾರಿಗಳೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಂಪೂರ್ಣ ಬೆಂಬಲಕ್ಕೆ ಹಾಗೂ ಧರ್ಮಸ್ಥಳದ ಪಾವಿತ್ರ್ಯ
ರಕ್ಷಣೆಗೆ ಸದಾ ಸಿದ್ಧರೂ, ಬದ್ಧರೂ ಆಗಿದ್ದು, ಧರ್ಮಸ್ಥಳದ ಜೊತೆ ಸದಾ ಇರುತ್ತೇವೆ ಎಂದು ಭರವಸೆ ನೀಡಿದರು. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಸತ್ಯ, ಧರ್ಮ, ನ್ಯಾಯ, ನೀತಿ ಸದಾ ನೆಲೆ ನಿಂತಿರುವ ಧರ್ಮಸ್ಥಳದ ರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಿದ್ದೇವೆ ಎಂದರು.
ಮಾಣಿಲದ ಮೋಹನದಾಸ ಸ್ವಾಮೀಜಿ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಬೆಳಪು ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ಸುಮಾರು ಹತ್ತು ಸಾವಿರ ಮಂದಿ ಜಾಥಾದಲ್ಲಿ ಬಂದಿದ್ದರು.
ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಸ್ವಾಗತಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಧನ್ಯವಾದವಿತ್ತರು.











