ಬೆಳ್ತಂಗಡಿ: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುವ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವೇಳೆ ಬೆಳ್ತಂಗಡಿ ತಾಲೂಕಿನ ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ಕಡ್ಡಾಯವಾಗಿ ‘ಬಿಲ್ಲವ ‘ ಎಂದೇ ನಮೂದಿಸಬೇಕು ಎಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿದರು.
ಅವರು ಸೆ. 22 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸರಕಾರದ ಎಲ್ಲಾ ಮೀಸಲಾತಿ, ಸೌಲಭ್ಯಗಳು ಜನಸಂಖ್ಯೆಯ ಆಧಾರದಲ್ಲಿ ನಿರ್ಧಾರವಾಗುವುದರಿಂದ, ಬಿಲ್ಲವರೆಲ್ಲರೂ 9ನೇ ಜಾತಿ ಕಾಲಂನಲ್ಲಿ ಬಿಲ್ಲವ ಎಂದೇ ನಮೂದಿಸಬೇಕು. ಯಾರೂ ತಮ್ಮ ‘ಬರಿ’ಯನ್ನು ಬಂಗೇರ, ಸಾಲಿಯಾನ್, ಸುವರ್ಣ, ಇತ್ಯಾದಿಯಾಗಿ ನೀಡಬಾರದು ಎಂದರು.
ಹಿಂದಿನ ಜಾತಿಗಣತಿ ವೇಳೆ ಬಿಲ್ಲವರು ತಮ್ಮ ‘ಜಾತಿ’ಯನ್ನು ನಮೂದಿಸುವಾಗ ಬರಿಯನ್ನು ಜಾತಿಯಾಗಿ ನೀಡಿದ್ದರಿಂದ ಬಿಲ್ಲವರ ಸಂಖ್ಯೆ ತೀರಾ ಕಡಿಮೆ ಬಂದಿತ್ತು. ಕಾರಣ ನಮ್ಮವರ ಕೆಲವು ಸರ್ನೇಮ್ಗಳು ಉಳಿದ ಜಾತಿಗಳ ಸರ್ನೇಮ್ ಒಂದೇ ಆಗಿರುವುದರಿಂದ ಗೊಂದಲವಾಗಿತ್ತು. ಹೀಗಾಗಿ ಈ ಗೊಂದಲವನ್ನು ತಪ್ಪಿಸಲು ಕರಾವಳಿಯ ಬಿಲ್ಲವರೆಲ್ಲರೂ ಹೆಸರನ್ನು ಸರಿಯಾಗಿ ನೀಡಿ 9ನೇ ಜಾತಿ ಕಾಲಂನಲ್ಲಿ ‘ಬಿಲ್ಲವ’ ಎಂದೇ ಬರೆಸಬೇಕು. 10ನೇ ಉಪಜಾತಿ ಕಾಲಂನಲ್ಲಿ ಅನ್ವಯಿಸುವುದಿಲ್ಲ ಎಂದು ಬರೆಯಬೇಕು. ಅಲ್ಲದೇ 11ನೇ ಕಾಲಂನ ಜಾತಿಗೆ ಇರುವ ಸಮಾನರ್ಥಕ ಹೆಸರು ಎಂದು ಇರುವಲ್ಲಿ ಅನ್ವಯಿಸುವುದಿಲ್ಲ ಎಂದೇ ಬರೆಯಬೇಕು ಎಂದರು.
ಕರ್ನಾಟಕದಲ್ಲಿ ಈಗ 26 ಒಳಪಂಗಡಗಳಿರುವ ಬಿಲ್ಲವ ಸಮುದಾಯದ ಜನಸಂಖ್ಯೆ 40ರಿಂದ 50ಲಕ್ಷವಿದ್ದು, ರಾಜ್ಯದ ನಾಲ್ಕನೇ ಗರಿಷ್ಠ ಜನಸಂಖ್ಯೆ ಹೊಂದಿರುವ ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ್ ಎಲ್ಲವೂ ಬಿಲ್ಲವ ಜಾತಿಯಡಿ ಬರಲಿದ್ದು, ಕರಾವಳಿಯ ಬಿಲ್ಲವರು ಮಾತ್ರ ಕಡ್ಡಾಯವಾಗಿ ಜಾತಿಯನ್ನು ‘ಬಿಲ್ಲವ’ ಎಂದೇ ನಮೂದಿಸುವಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಮುದಾಯ ನಾಯಕರು ಒಮ್ಮತದಿಂದ ನಿರ್ಧರಿಸಿದೇವೆ ಎಂದರು.
ಪತ್ರಿಕೆಯಾಗೋಷ್ಠಿಯಲ್ಲಿ ದಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ ಪ್ರಸಾದ್,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಸಂಘದ ಮಾಜಿ ಅಧ್ಯಕ್ಷರಾದ ಚಿದಾನಂದ ಪೂಜಾರಿ ಎಲ್ದಕ್ಕ, ಜಯರಾಮ್ ಬಂಗೇರ ಹೇರಾಜೆ, ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ್ ಸಾವ್ಯ,ಸಂಘದ ಜೊತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು, ನಿರ್ದೇಶಕರಾದ ಚಂದ್ರಶೇಖರ್ ಇಂದಬೆಟ್ಟು, ರೂಪೇಶ್, ರವೀಂದ್ರ ಬಿ ಅಮೀನ್ ಉಪಸ್ಥಿತರಿದ್ದರು.











