ಬೆಳ್ತಂಗಡಿ: ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪನವರು ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.
ಜುಲೈ 25 ರಂದು ಬೆಂಗಳೂರಿನಲ್ಲಿ ಶ್ರೀ ವಿಶ್ವೇಶ್ವರ ಭಟ್ ಅವರ ನೂರನೆ ಕೃತಿ ಬಿಡುಗಡೆ ಸಮಾರಂಭದಲ್ಲಿ ನಾವು ಜೊತೆಯಾಗಿ ಭಾಗವಹಿಸಿದ್ದು ಆತ್ಮೀಯವಾಗಿ ಮಾತನಾಡಿದ್ದೆವು. ಅದು ನಮ್ಮ ಕೊನೆಯ ಭೇಟಿಯಾಗಿತ್ತು. ನೇರ ನಡೆ-ನುಡಿಯ ಸರಳ ವ್ಯಕ್ತಿತ್ವವನ್ನು ಹೊಂದಿದ್ದ ಅವರು ಕನ್ನಡ ನಾಡು-ನುಡಿ, ಸಂಸ್ಕೃತಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ.
ಅವರ ಅನೇಕ ಕಾದಂಬರಿಗಳು ಹಾಗೂ ಸಾಹಿತ್ಯ ಕೃತಿಗಳು ಹಲವು ಬಾರಿ ಮರು ಮುದ್ರಣಗೊಂಡಿರುವುದಲ್ಲದೆ ಇತರ ಭಾಷೆಗಳಿಗೂ ಭಾಷಾಂತರಗೊಂಡಿವೆ. ಅವರ ಹೆಚ್ಚಿನ ಕೃತಿಗಳನ್ನು ನಾನು ಆಸಕ್ತಿಯಿಂದ ಓದಿದ್ದೇನೆ.1981ರ ನವೆಂಬರ್ 26 ರಂದು ಗುರುವಾರ ಲಕ್ಷದೀಪೋತ್ಸವ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಅವರು ಅಧ್ಯಕ್ಷತೆ ವಹಿಸಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ.











