ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅದರ ಧರ್ಮಾಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಹಾಗೂ ಎಂ.ಡಿ ಸಮೀರ್ ಮತ್ತಿತರರ ಚಲನವಲನ, ಚಟುವಟಿಕೆಗಳು, ಹಣಕಾಸಿನ ಮೂಲ ಮತ್ತು ಅವರ ಸಂಪರ್ಕ ಜಾಲಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.
ಈ ವಿಷಯದಲ್ಲಿ ವಿಶೇಷ ತನಿಖಾ ತಂಡ ಹಾಗೂ ಇತರರಿಗೆ ತಾವು 2025ರ ಆ.20, ಸೆಪ್ಟೆಂಬರ್5, 8 ಮತ್ತು 9ರಂದು ಸಲ್ಲಿಸಿರುವ ಮನವಿ ಮತ್ತು ದೂರುಗಳನ್ನು ಪರಿಗಣಿಸಲು ನಿರ್ದೇಶನ ನೀಡುವಂತೆ ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರಾದ ಬೆಂಗಳೂರು ನಿವಾಸಿ ತೇಜಸ್ ಎ. ಗೌಡ, ಬೆಳ್ತಂಗಡಿಯ ಉಜಿರೆ ನಿವಾಸಿ ಭಾಸ್ಕರ್ಬಡೆಕೊಟ್ಟು ಧರ್ಮಸ್ಥಳ ನಿವಾಸಿಗಳಾದ ಸುರೇಂದ್ರ ಪ್ರಭು ಹಾಗೂ ಧನಕೀರ್ತಿ ಅರಿಗ ಅವರು ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಪ್ರತಿವಾದಿಗಳನ್ನಾಗಿ ಮಾಡಲಾಗಿರುವ ರಾಜ್ಯ ಸರಕಾರದ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಎಸ್.ಐ.ಟಿ., ಆದಾಯ ತೆರಿಗೆ ಮಂಗಳೂರು ಕೇಂದ್ರ ವಲಯ ಅಧಿಕಾರಿ, ಜಾರಿ ನಿರ್ದೇಶನಾಲಯದ ಮಂಗಳೂರು ಉಪ ವಲಯ ಕಚೇರಿಯ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಅ.16ಕ್ಕೆ ಮುಂದೂಡಿತು.













