ಉಜಿರೆ : ಪುದುವೆಟ್ಟಿನಂತಹ ಗ್ರಾಮೀಣ ಪ್ರದೇಶದಲ್ಲಿ ಎನ್ಎಸ್ಎಸ್ ಕಾರ್ಯ ಚಟುವಟಿಕೆ ಹಮ್ಮಿಕೊಂಡಿರುವುದು ಸಂತಸವಾಗಿದೆ ಎಂದು ಪುದುವೆಟ್ಟು ಗ್ರಾ.ಪಂ.ಅಧ್ಯಕ್ಷ ಪೂರ್ಣಾಕ್ಷ ಹೇಳಿದರು.
ಅವರು ಎಸ್ ಡಿ ಎಮ್ ಅನುದಾನಿತ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮಾತನಾಡಿ, ಎನ್ ಎಸ್ ಎಸ್ ಎಂದರೆ ಕೇವಲ ಶ್ರಮದಾನ ಅಲ್ಲ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ, ಜೀವನ ಮೌಲ್ಯ, ಮತ್ತು ಅವರು ಬದುಕುವ ಕಲೆಯನ್ನು ಶಿಬಿರಗಳ ಮೂಲಕ ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುವುದು. ಶ್ರಮದಾನದಲ್ಲಿ ಕೆಲಸ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಸಹಕಾರ ಮನೋಭಾವ, ಸೇವಾ ಮನೋಭಾವವನ್ನು ಮೂಡಿಸಿ ಅವರು ಸಾಮಾಜಿಕವಾಗಿ ತೊಡಗಿಸಿಕೊಳ್ಳಬೇಕು ಎಂಬುದೇ ಈ ಶಿಬಿರದ ಉದ್ದೇಶವಾಗಿದೆ ಎಂದರು.
ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡ, ಎಸ್ ಡಿ ಎಮ್ ಅನುದಾನಿತ ಪ್ರಾಥಮಿಕ ಶಾಲೆ ಪುದುವೆಟ್ಟಿನ ಮುಖ್ಯೋಪಾಧ್ಯಾಯ ಶೀನಪ್ಪ ಗೌಡ, ನಿವೃತ ಮುಖ್ಯ ಶಿಕ್ಷಕ ಶ್ರೀಧರ್ ನಾಯರ್, ಪ್ರಗತಿ ಪರ ಕೃಷಿಕ ಚಿತ್ತರಂಜನ್ ಜೈನ್, ಸಹಕಾರಿ ಹಾಲು ಉತ್ಪಾದಕರ ಸಂಘದ ರಂಗನಾಥ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಶಿಧರ್, ಎ ಪಿ ಎಂ ಸಿ ಮಾಜಿ ಸದಸ್ಯರಾದ ಅಬ್ದುಲ್ ಗಪೂರ್, ಮತ್ತಿತರರು ಉಪಸ್ಥಿತರಿದ್ದರು.
ಎನ್ಎಸ್ಎಸ್ ಯೋಜನಾಧಿಕಾರಿ ಪ್ರಕಾಶ್ ಗೌಡ ಮತ್ತು ಉಪ ಯೋಜನಾಧಿಕಾರಿಗಳಾದ ಲೋಹಿತ್ ಎಸ್, ಪುಷ್ಪಲತಾ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ಮಂಜೂಷ ಸ್ವಾಗತಿಸಿ , ಮಾನ್ಯ ವಂದಿಸಿದರು. ಭವಿತಾ ಕಾರ್ಯಕ್ರಮವನ್ನು ನಿರೂಪಿಸಿದರು.












