ಕೊಯ್ಯೂರು : “ಗ್ರಾಮೀಣ ಜನತೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ -ಬೆಳೆಸುವಲ್ಲಿ ಕೈ ಜೋಡಿಸಬೇಕು. ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆಗಳ ಮೂಲಕ ಬದುಕು ರೂಪಿಸಿಕೊಳ್ಳುವ ಪ್ರಯತ್ನ ಮಾಡಬೇಕು ” ಎಂದು ಉಜಿರೆಯ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಕೆ.ಮೋಹನ್ ಕುಮಾರ್ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಕಸಬ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮುಂದಿನ ದಿನಗಳಲ್ಲಿ ಸಂಸ್ಥೆಯ ಪ್ರಗತಿಗೆ ಸಹಕರಿಸುವ ಬಗ್ಗೆ ಭರವಸೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿಯವರು ಸಂಸ್ಥೆಗೆ ವಿವಿಧ ಕೊಡುಗೆಗಳನ್ನು ನೀಡಿ ಸಹಕರಿಸಿದ ದಾನಿಗಳನ್ನು ಕೊಂಡಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಬೆಳ್ತಂಗಡಿ ತಾಲೂಕು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿಯವರು, ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರದಿಂದ ಕೊಡಲ್ಪಡುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಗ್ರಾಮದ ಜನರು ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುವ ಮೂಲಕ ಅಸ್ತಿತ್ವವನ್ನು ಕಾಪಾಡಿಕೊಳ್ಳುವ ಬಗ್ಗೆ ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಮಾತನಾಡಿ ಮುಂದಿನ ದಿನಗಳಲ್ಲಿ ಸಂಸ್ಥೆಯ ಅಭಿವೃದ್ಧಿಗೆ ಅನುದಾನ ದೊರಕಿಸಿಕೊಡುವ ಬಗ್ಗೆ ಪ್ರಯತ್ನಿಸುವುದಾಗಿ ತಿಳಿಸಿ ದರು. ಬೆಂಗಳೂರಿನ ಉದ್ಯಮಿ, ಧಾರ್ಮಿಕ ನೇತಾರ ಕಿರಣ್ ಚಂದ್ರ ಡಿ., ಪುಷ್ಪಗಿರಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.
ಕರ್ನೋಡಿ ಲಾಯಿಲ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಗನ್ನಾಥ್ ಮಾತನಾಡುತ್ತಾ ಈ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಜನರ ಸಹಕಾರದ ಬಗ್ಗೆ ಸ್ಮರಿಸುತ್ತಾ, ಸಂಸ್ಥೆಯ ಅಭಿವೃದ್ಧಿಗೆ ರೂ. ಹತ್ತುಸಾವಿರದ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯಿಂದ ಬಳೆಂಜ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ರಂಗಸ್ವಾಮಿ ಸಿ. ಆರ್. ದಂಪತಿಗಳನ್ನು ಸನ್ಮಾನಿಸಲಾಯಿತು. ಶಾಲೆಗೆ ವಿವಿಧ ಕೊಡುಗೆಗಳನ್ನು ನೀಡಿದ ದಾನಿಗಳನ್ನು ಗುರುತಿಸಿ, ಗೌರವಿಸಲಾಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಬಜಿಲ, ಎಸ್ ಡಿ ಎಂ ಸಿ ಅಧ್ಯಕ್ಷ ಗ್ರಾಮ ಪಂಚಾಯತ್ ಸದಸ್ಯರಾದ ಜಗನ್ನಾಥ, ಗಿರೀಶ್ ಮರಿಯ, ದಿವ್ಯ ಗಾಂಜಾಲು, ಲೋಕೇಶ್ ಪಾಂಬೇಲು , ಸಮೂಹ ಸಂಪನ್ಮೂಲ ವ್ಯಕ್ತಿ ವಾರಿಜ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷ ರವೀಂದ್ರನಾಥ್ ಗೌಡ, ಎಸ್ ಕೆ ಡಿ ಆರ್ ಡಿ ಪಿ ಮೇಲ್ವಿಚಾರಕರಾದ ಸುಶಾಂತ್, ಪ್ರವೀಣ್ ಪೂಜಾರಿ ಪೊಸಲಾಯಿ, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಪೂಜಾರಿ ಗಾಳಿತೋಟ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ ಆಲನೆ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಜಯಲಕ್ಷ್ಮಿ, ಶಾಲಾ ವಿದ್ಯಾರ್ಥಿ ನಾಯಕ ಲತೀಶ್ ಕುಮಾರ್ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿನಿಯರಾದ ಪ್ರಾರ್ಥನ, ನಿಶ್ಚಿತ, ವರ್ಷ, ವಿನ್ಸಿತ ಪ್ರಾರ್ಥಿಸಿ, ಸಂಸ್ಥೆಯ ಮುಖ್ಯ ಶಿಕ್ಷಕಿ ವಸಂತಿ ಕೆ. ಎನ್. ಸ್ವಾಗತಿಸಿ, ವರದಿ ವಾಚನಗೈದರು. ಅಂಗನವಾಡಿ ಕಾರ್ಯಕರ್ತೆ ಸುಮಂಗಲ ಅಂಗನವಾಡಿ ವಿದ್ಯಾರ್ಥಿಗಳ ಬಹುಮಾನ ಪಟ್ಟಿ ವಾಚಿಸಿದರು. ಅತಿಥಿ ಶಿಕ್ಷಕಿ ಶ್ರೀಮತಿ ವಿಜಯಶ್ರೀ ಶಾಲಾ ವಿದ್ಯಾರ್ಥಿಗಳ ಬಹುಮಾನ ಪಟ್ಟಿ ವಾಚಿಸಿದರು. ಜ್ಞಾನದೀಪ ಶಿಕ್ಷಕಿ ವೇದಾವತಿ ಸನ್ಮಾನಿತರ ಅಭಿನಂದನಾ ಪತ್ರ ವಾಚಿಸಿದರು.ಜಿ. ಪಿ. ಟಿ. ಸಹಶಿಕ್ಷಕಿಯರಾದ ಡಿ. ದೇವಿಬಾಯಿ ಮತ್ತು ಸುಶ್ಮಿತಾ ರಾವ್ ಕಾರ್ಯಕ್ರಮ ನಿರ್ವಹಣೆಗೈದರು.











