ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ ಅಧ್ಯಕ್ಷತೆಯಲ್ಲಿ ಪಂಬದ, ಮೈಲ, ಬಾಕುಡ, ನಲಿಕೆ, ನಲ್ಕದಾಯ, ಅಜಿಲ, ಬೈರ, ಚೆನ್ನದಾಸರ್ , ಮಲೆಕುಡಿಯ, ಪರವನ್, ಕೊರಗ ಮತ್ತು ಇತರೆ ಅಲೆಮಾರಿ ಸಮುದಾಯದವರೊಂದಿಗೆ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ ಜ.೬ ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪಲ್ಲವಿ ಜಿ ಮಾತನಾಡಿ, ಈಗಾಗಲೇ ಕುಂದುಕೊರತೆ-ಪ್ರಗತಿ ಪರಿಶೀಲನಾ ಸಭೆ ೨೮ ಜಿಲ್ಲೆಗಳಲ್ಲಿ ತಾಲೂಕು, ಗ್ರಾಮ ಪ್ರವಾಸ ಪೂರ್ಣಗೊಂಡು ದಕ್ಷಿಣ ಜಿಲ್ಲೆಯಲ್ಲಿ ೨೯ನೇ ಸಭೆ ನಡೆಯುತ್ತಿದೆ. ಅಲೆಮಾರಿಗಳ ಸಮಸ್ಯೆ ಜಲ್ವಂತವಾಗಿದ್ದು ಆ ಕುಟುಂಬಗಳಿರುವ ಪ್ರದೇಶಕ್ಕೆ ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಕಾಲಮಿತಿಯೊಳಗೆ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು, ರಾಜ್ಯ ಸರ್ಕಾರ ಜಾತಿ ಧರ್ಮ ಮತ ಭೇದವಿಲ್ಲದೆ ಸರ್ವತೋಮುಖ ಅಭಿವೃದ್ಧಿಗೆ ಕಾರಣೀಭೂತವಾಗಿದೆ ಎಂದು ಹೇಳಿದರು. ಬಳಿಕ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಜಂಟಿ ಕಾರ್ಯದರ್ಶಿ ಆನಂದ ಕುಮಾರ್ ಏಕಲವ್ಯ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಸದಸ್ಯರಾದ ಕೆ.ನೇಮಿರಾಜ್, ಸೌಮ್ಯಾ ಹಾಗೂ ಮಾರಿಟಾ ಪಿಂಟೋ, ಪ.ಜಾತಿ ಮತ್ತು ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ಜಯಾನಂದ ಪಿಲಿಕಳ, ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಮತ್ತು ವೇಣೂರು ವಲಯ ಅರಣ್ಯಾಧಿಕಾರಿ ಭರತ್ , ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ, ಪಂಚಾಯತ್ ರಾಜ್ ಇಂಜಿನಿಯರಿAಗ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಜನಾರ್ದನ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ವಿಜಯ್ ಕುಮಾರ್ ಉಪಸ್ಥಿತರಿದ್ದರು.
ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್ ಸ್ವಾಗತಿಸಿ, ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಖ್ಯೋಪಾಧ್ಯಾಯ ಮುರಳಿಧರ್ ನಿರೂಪಿಸಿದರು.











