September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

ಬೆಳ್ತಂಗಡಿ : ನಗರ , ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಪೌರ ಕಾರ್ಮಿಕರು ತಮ್ಮ ಸಂವಿಧಾನಬದ್ಧ ಹಕ್ಕುಗಳಿಗೆ , ಪೌರ ಕಾರ್ಮಿಕರ ಮೇಲಿನ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ಅಗತ್ಯವಿದೆ ಎಂದು ಪೌರ ಕಾರ್ಮಿಕರ ಸಂಘದ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಹಿರಿಯ ದಲಿತ ಮುಖಂಡ ಎಸ್.ಪಿ ಆನಂದ ಹೇಳಿದರು.

ಅವರು ಬೆಳ್ತಂಗಡಿ ನಗರದ ಮಂಜುನಾಥ ಕಲಾ ಭವನದ ಪಿನಾಕಿ ಸಭಾಂಗಣದಲ್ಲಿ ಆದಿತ್ಯವಾರ ಪಟ್ಟಣ / ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಬೆಳ್ತಂಗಡಿಯಲ್ಲಿ ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ ನಡೆದಿದೆ‌. ಮುಂದಿನ ದಿನಗಳಲ್ಲಿ ಇಡೀ ಜಿಲ್ಲೆಯಾದ್ಯಂತ ಸಂಘಟನೆ ವಿಸ್ತರಿಸಲಾಗುವುದು ಎಂದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಲಾಗುತ್ತಿದೆ , ಕಾರ್ಮಿಕ ಕಾಯ್ದೆಗಳನ್ನು ಉಲ್ಲಂಘಿಸಿ ಕನಿಷ್ಠ ವೇತನ ನೀಡದೆ ದುಡಿಸುತ್ತಿರುವುದು ಅಪರಾಧವಾಗಿದೆ. ಪೌರ ಕಾರ್ಮಿಕರ ಶ್ರಮದ ಪ್ರತಿಫಲ ಸಂಜೀವಿನಿ ಒಕ್ಕೂಟ ಮತ್ತು ಅಧಿಕಾರಿಗಳ ಪಾಲಗುತ್ತಿರುವುದು ದುರಂತ. ಸ್ವಚ್ಚತಾ ಕಾರ್ಯಕ್ಕೆ ಸಂಬಂಧಿಸಿದ ಪ್ರಶಸ್ತಿಗಳು ಪೌರ ಕಾರ್ಮಿಕರಿಗೆ ಸಲ್ಲಬೇಕು ಎಂದರು. ಮಹಿಳೆ , ಪುರುಷರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದ ಅವರು ಗ್ರಾಮೀಣ ಪ್ರದೇಶಗಳಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರನ್ನು ತಕ್ಷಣ ಖಾಯಂಗೊಳಿಸಲು ಒತ್ತಾಯಿಸಿ ಸದ್ಯದಲ್ಲೇ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಹೋರಾಟ ನಡೆಸಲಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರು ತಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಸಭೆಯ ಮುಂದಿಟ್ಟರು. ಸಂಜೀವಿನಿ ಒಕ್ಕೂಟ ಬೇಡ , ನೇರ ಪಾವತಿಯಾಗಬೇಕು. ಅಧಿಕಾರಿಗಳು , ಜನಪ್ರತಿನಿಧಿಗಳು ನಡೆಸುವ ದೌರ್ಜನ್ಯಗಳು , ಕಡಿಮೆ ವೇತನ , ವೇತನ ತಾರತಮ್ಯ , ವಾರದಲ್ಲಿ 2-3 ದಿನ ಕೆಲಸ , ಕಾನೂನುಬದ್ಧ ಸವಲತ್ತುಗಳ ನಿರಾಕರಣೆ ಮೊದಲಾದ ಸಮಸ್ಯೆಗಳ ಬಗ್ಗೆ ಮಾತನಾಡಿದರು .

ಸ್ವಚ್ಚತಾ ವಾಹನ ಚಾಲಕ ಸಂಘದ ದ.ಕ ಜಿಲ್ಲಾಧ್ಯಕ್ಷ ವರುಣ್ ಮಾತನಾಡಿ ತಮ್ಮ ಹಕ್ಕುಗಳ ರಕ್ಷಣೆಗಾಗಿ ಮತ್ತು ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳನ್ನು ಪಡೆಯಲು ಸಂಘಟಿತರಾಗಬೇಕು. ಈಗಾಗಲೇ ಜಿಲ್ಲೆಯಲ್ಲಿ 600 ಪೌರ ಕಾರ್ಮಿಕರನ್ನು ಖಾಯಂ ‌ಮಾಡಲಾಗಿದೆ ಇದು ಸಂಘಟನೆಯ ಹೋರಾಟದ ಫಲವಾಗಿದೆ ಎಂದರು.

ವೇದಿಕೆಯಲ್ಲಿ ಪೌರ ಕಾರ್ಮಿಕ ಸಂಘದ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಚಂದ್ರ ಬೋವಿ , ಜತೆ ಕಾರ್ಯದರ್ಶಿ ಸುರೇಶ್ ಕೆ ಅರಳಿ , ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಮಿಕರ ಸಂಘದ ಅಧ್ಯಕ್ಷೆ ರೇಣುಕಾ ಕುಕ್ಕೇಡಿ , ಕಾರ್ಯದರ್ಶಿ ಸುಮತಿ ವೇಣೂರು ಉಪಸ್ಥಿತರಿದ್ದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸುದೆಮುಗೇರು ಮಾತನಾಡಿ ನಮ್ಮೆಲ್ಲರ ನಡುವಿನ ಭೇದಭಾವಗಳನ್ನು ಮರೆತು ನಮ್ಮೆಲ್ಲರ ಹಕ್ಕುಗಳಿಗಾಗಿ , ನಮ್ಮ ಮೇಲೆ ನಡೆಯುವ ವಿವಿಧ ರೀತಿಯ ದಬ್ಬಾಳಿಕೆಯ ವಿರುದ್ಧ ಸಂಘಟಿತರಾಗಬೇಕಾದ ಅಗತ್ಯವಿದೆ ಎಂದರು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ವಚ್ಚತಾ ವಾಹನದ ಚಾಲಕ ಶಿವಕುಮಾರ್ ಸ್ವಾಗತಿಸಿ, ಶೇಖರ್ ಲಾಯಿಲ ಕಾರ್ಯಕ್ರಮ ನಿರೂಪಿಸಿ , ಧನ್ಯವಾದವಿತ್ತರು.

Related posts

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya
error: Content is protected !!