ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಶಿಲ ಗ್ರಾಮದ ಉಮ್ಮಂತಿ ಮಾರ ಪ್ರದೇಶದಲ್ಲಿ ಬಹು ವರ್ಷಗಳಿಂದ ರೈತಾಪಿ ವರ್ಗದಿಂದ ಕೇಳಿ ಬರುತ್ತಿದ್ದ ಕಿಂಡಿ ಅಣೆಕಟ್ಟು (ಚೆಕ್ ಡ್ಯಾಂ) ನಿರ್ಮಾಣ ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.2.50 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ಅವರು ತಿಳಿಸಿದ್ದಾರೆ.
ಶಿಶಿಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಪ್ರದೇಶದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಅಗತ್ಯತೆ ಕುರಿತು ಈಗಾಗಲೇ ಸಣ್ಣ ನೀರಾವರಿ ಹಾಗೂ ಅಂತರ್ಜಲ ಇಲಾಖೆಯಿಂದ ಸರ್ವೆ ಕಾರ್ಯ ನಡೆಸಲಾಗಿತ್ತು. ಉಮ್ಮಂತಿ ಮಾರ ಪ್ರದೇಶದಲ್ಲಿ ಚೆಕ್ ಡ್ಯಾಂ ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿ ಜಾರಿಯಾದಲ್ಲಿ ನೂರಾರು ಎಕರೆ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಲಭಿಸಿ ಕೃಷಿ ಉತ್ಪಾದನೆ ಹೆಚ್ಚಾಗಲಿದೆ. ಈ ಯೋಜನೆಯ ಮಹತ್ವವನ್ನು ಮಾನ್ಯ ಸಣ್ಣ ನೀರಾವರಿ ಸಚಿವರು ಹಾಗೂ ಇಲಾಖಾ ಕಾರ್ಯದರ್ಶಿಗಳ ಗಮನಕ್ಕೆ ತಂದು ಅಗತ್ಯ ಮನವರಿಕೆ ಮಾಡಿದ ಫಲವಾಗಿ ರಾಜ್ಯ ಸರ್ಕಾರವು ಈ ಮಹತ್ವದ ಕಾಮಗಾರಿಗೆ ರೂ.2.50 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ.
ಈ ಯೋಜನೆಗೆ ಸಹಕಾರ ನೀಡಿದ ರಾಜ್ಯ ಸರ್ಕಾರಕ್ಕೆ, ಮಾನ್ಯ ಸಣ್ಣ ನೀರಾವರಿ ಸಚಿವರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ರೈತರ ಬಹುಕಾಲದ ಬೇಡಿಕೆ ಈಡೇರಿರುವುದರಿಂದ ಶಿಶಿಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತ ಸಮುದಾಯದಲ್ಲಿ ಸಂತಸ ವ್ಯಕ್ತವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











