ಉಜಿರೆಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮವವು ಸಂಭ್ರಮದಿಂದ ನಡೆಯಿತು.

ಭಾರತೀಯ ನೌಕಾದಳದ ನಿವೃತ್ತ ಲೆಫ್ಟಿನೆಂಟ್ ಕಮಾಂಡರ್ ಭರತ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ. ಕಾಲೇಜಿನ ಎನ್.ಸಿ.ಸಿ. ಕೆಡೆಟ್ಸ್, ಎನ್.ಸಿ.ಸಿ. (ಆರ್ಮಿ) ಅಧಿಕಾರಿ ಲೆಫ್ಟಿನೆಂಟ್ ಡಾ. ಭಾನುಪ್ರಕಾಶ್ ಮಾರ್ಗದರ್ಶನದಲ್ಲಿ, ರೋವರ್ಸ್ ಆ್ಯಂಡ್ ರೇಂಜರ್ಸ್ ತಂಡದ ಬ್ಯಾಂಡ್ ಹಿನ್ನೆಲೆಯೊಂದಿಗೆ ಆಕರ್ಷಕ ಪಥಸಂಚಲನ ನಡೆಸಿದರು. ಕಲಾಕೇಂದ್ರದ ವಿದ್ಯಾರ್ಥಿಗಳು ರಾಷ್ಟ್ರಗೀತೆ, ದೇಶಭಕ್ತಿಗೀತೆ ಹಾಡಿದರು.
ಬಳಿಕ ಸ್ತಬ್ಧಚಿತ್ರ ಪ್ರದರ್ಶನ ನಡೆಯಿತು.

ಭಾರತದ ಜಾನಪದ ವೈಭವ, ಕೇರಳ ಸಂಸ್ಕೃತಿಯ ವಿಶೇಷತೆ, ಆಪರೇಷನ್ ಸಿಂದೂರದ ವಿವರ, ವಂದೇ ಮಾತರಂ ಗೀತೆಯ ಜೊತೆಗಿನ ಸತ್ವಯುತ ಮೌಲ್ಯ, ವಿಜ್ಞಾನ ಮತ್ತು ತಂತ್ರಜ್ಞಾನದ ನಿಖರ ಸಾಧನೆಯ ವಿವರಗಳನ್ನು ವಿವಿಧ ಪ್ರದರ್ಶನಗಳು ಬಿಂಬಿಸಿದವು.
ಸ್ಥಳೀಯ ವಿವಿಧ ಎಸ್.ಡಿ.ಎಂ. ಶಾಲಾ ಕಾಲೇಜುಗಳ ಪ್ರಾಂಶುಪಾಲರು, ವಿಭಾಗಗಳ ಮುಖ್ಯಸ್ಥರು, ಬೋಧಕ- ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಎನ್.ಎಸ್.ಎಸ್. ಸ್ವಯಂಸೇವಕರು, ಕ್ರೀಡಾವಿಭಾಗದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆಯ ವಿವರಗಳನ್ನು ಪ್ರಸ್ತುತಪಡಿಸಲಾಯಿತು.
ಸ್ತಬ್ದಚಿತ್ರಗಳಲ್ಲಿ, ಶ್ರೀ ಸಿದ್ದವನ ಗುರುಕುಲದ ತಂಡ ಹಾಗೂ ಪಾಲಿಟೆಕ್ನಿಕ್ ಕಾಲೇಜು ತಂಡ ಕ್ರಮವಾಗಿ ಪ್ರಥಮ, ದ್ವಿತೀಯ ಬಹುಮಾನ ಪಡೆದವು. ಅತಿಥಿಗಳು ಬಹುಮಾನ ವಿತರಿಸಿದರು.











