ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕು. ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ.16ರಂದು ಪಕ್ಷದ ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕಿತಾ ಶೆಟ್ಟಿ ಯವರು ಮಹಿಳಾ ದಿನಾಚರಣೆಯ ಮಹತ್ವ ಹಾಗೂ ಪ್ರಸ್ತುತ ಕೇಂದ್ರ ಸರಕಾರದಿಂದ ಮಹಿಳಾ ಕ್ರೀಡಾಪಟುಗಳಿಗೆ ಕೊಡುತ್ತಿರುವ ಪ್ರೋತ್ಸಾಹ ಹಾಗೂ ಸೌಲಭ್ಯಗಳ ಬಗ್ಗೆ ಗಮನ ಸೆಳೆದರು.

ತಾಲೂಕಿನ ಯುವ ವಕೀಲೆ ಕು. ಸೌಮ್ಯ ಪಿ ಮಹಿಳೆಯರಿಗೆ ಕಾನೂನಿನ ಬಗ್ಗೆ ಮಾಹಿತಿಯನ್ನು ನೀಡಿದರು. ಜಿಲ್ಲಾ ಎಸ್ ಸಿ ಮೋರ್ಚಾದ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿ ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರಕಾರ ಕೊಡುತ್ತಿರುವ ಮಹತ್ವದ ಬಗ್ಗೆ ತಿಳಿಸಿದರು.
ಬೆಳ್ತಂಗಡಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಬೆಳಾಲು ಮಾತನಾಡಿ ,ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗುವುದರ ಜೊತೆಗೆ ತಮ್ಮ ಆರೋಗ್ಯಕ್ಕೂ ಮಹತ್ವ ಕೊಡಬೇಕು. ಈ ನಿಟ್ಟಿನಲ್ಲಿ ಸಮತೋಲನ ಆಹಾರ ಸೇವಿಸಬೇಕು. ಸಿರಿಧಾನ್ಯಕ್ಕೆ ಹೆಚ್ಚಿನ ಮಹತ್ವವನ್ನು ಕೊಡಬೇಕು ಅನ್ನುವ ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರು. ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಕಮಲಾಕ್ಷಿ, ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿ ಆಶಾ ಸಲ್ಧಾನ, ಪಂಚಾಯತ್ ಮಾಜಿ ಅಧ್ಯಕ್ಷರುಗಳು, ಪಂಚಾಯತ್ ಸದಸ್ಯರುಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತುಳಸಿ ಉಮೇಶ್ ಸ್ವಾಗತಿಸಿ, ನಿರೂಪಿಸಿ, ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು.












