ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಾ. 2ರಿಂದ 11ರವರಿಗೆ ನಡೆದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ವಿಜಯ ಗೋಪುರ ಲೋಕಾರ್ಪಣೆ ನೂತನ ಬ್ರಹ್ಮರಥ, ಪುಷ್ಪರಥ ಸಮರ್ಪಣೆ ಕಾರ್ಯಕ್ರಮ ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭತಂತ್ರಿಯವರ ನೇತೃತ್ವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಮಾರ್ಗದರ್ಶನದಲ್ಲಿ ನಡೆದ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಅಭೂತಪೂರ್ವ ಯಶಸ್ಸಿಗೆ ಕಾರಣರಾದ ಸರ್ವ ಪದಾಧಿಕಾರಿಗಳು ಹಾಗೂ ಸರ್ವಸಮಿತಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವ ಧನ್ನೋಸ್ಮಿ ಕಾರ್ಯಕ್ರಮ ಮಾ. 21ರಂದು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ವಹಿಸಿದ್ದರು. ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತಸರ ಶರತ್ಕೃಷ್ಣ ಪಡುವೆಟ್ನಾಯ ಮಾತನಾಡಿ ಶ್ರಮಿಸಿದ ಸಮಿತಿಯ ಪದಾಧಿಕಾರಿಗಳಿಗೆ, ಸ್ವಯಂ ಸೇವಕರಿಗೆ ಕೃತಜ್ಞತೆ ಸಲ್ಲಿಸಿದರು. ವಿಜಯ ಗೋಪುರ ನಿರ್ಮಾಣ ಸಮಿತಿಯ ಅಧ್ಯಕ್ಷರು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ, ಶಾಸಕ ಹರೀಶ್ ಪೂಂಜ ಉಜಿರೆ ಶ್ರೀ ಧ. ಮ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್. ಬ್ರಹ್ಮಕಲಶೋತ್ಸವ ಸಮಿತಿ ಮತ್ತು ರಾಜ ಗೋಪುರ ನಿರ್ಮಾಣ ಸಮಿತಿಯ ಪ್ರಧಾನ ಸಂಚಾಲಕ ಕೆ. ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಸಪಲ್ಯ, ಕಾರ್ಯದರ್ಶಿ ಭರತ್ ಕುಮಾರ್, ಕೋಶಾಧಿಕಾರಿ ರಾಜೇಶ್ ಪೈ, ಮಹಿಳಾ ಸಮಿತಿಯ ಸಂಚಾಲಕಿ ವನಿತಾ ವಿ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಪಾಕತಜ್ಞ ರವಿ ಭಟ್, ಶಾಂತ ಭಟ್ ದಂಪತಿಯನು ಗೌರವಿಸಲಾಯಿತು.ಉಜಿರೆ ಯಾದವ ಆರ್ಟ್ಸ್ ನ ಯಾದವ ರವರು ರಚಿಸಿದ ಜನಾರ್ದನ ದೇವರ ದೊಡ್ಡ ಫೋಟೋ ಹಸ್ತಾಂತರಿಸಿದರು.ಎಲ್ಲಾ ಸ್ವಯಂ ಸೇವಕರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಆಹಾರ ಸಮಿತಿ ಸಂಚಾಲಕ ಅರುಣ್ ಕುಮಾರ್ ಎಂ ಎಸ್ ಅನಿಸಿಕೆ ವ್ಯಕ್ತಪಡಿಸಿದರು.ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿದರು. ಉಪನ್ಯಾಸಕ ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು. ರಾಜಗೋಪುರ ನಿರ್ಮಾಣ ಸಮಿತಿಯ ಸಹ ಕೋಶಾಧಿಕಾರಿ ಸಂಜೀವ ಶೆಟ್ಟಿ ಕುಂಟಿನಿ ವಂದಿಸಿದರು. ವಿವಿಧ ಉಪ ಸಮಿತಿಗಳ ಸಂಚಾಲಕರು, ಸದಸ್ಯರು, ಊರವರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.












