ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣ ನಡೆದ ಸುಮಾರು 14 ವರ್ಷಗಳೇ ಕಳೆದಿದೆ. ಇದೀಗ ಸುಪ್ರೀಂ ಕೋರ್ಟ್ ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚನೆ ನೀಡಿದೆ.
2012ರ ಅಕ್ಟೋಬರ್ನಲ್ಲಿ ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ನಾಪತ್ತೆಯಾಗಿದ್ದರು. ಮರುದಿನ ಅರಣ್ಯ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಯ ನಂತರ ಈಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬುದು ದೃಢಪಟ್ಟಿತ್ತು.
ಈ ಪ್ರಕರಣದ ಕುರಿತು ಆರಂಭದಲ್ಲಿ ಬೆಳ್ತಂಗಡಿ ಠಾಣೆಯ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸಿದ್ದರು. ನಂತರದಲ್ಲಿ ಸಿಬಿಐ ಪ್ರಕರಣದ ತನಿಖೆ ನಡೆಸಿತ್ತು. ಸಂತೋಷ್ ರಾವ್ ಎಂಬಾತನನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಆತನನನ್ನು ಬಂಧಿಸಲಾಗಿತ್ತು. ಆದರೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಾಕ್ಷಾಧಾರಗಳ ಕೊರತೆಯಿಂದ ಸಂತೋಷ್ ರಾವ್ನನ್ನು ನಿರ್ಧೋಷಿ ಎಂದು ತೀರ್ಪು ನೀಡಿತ್ತು.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ತನಿಖಾ ಸಂಸ್ಥೆಗಳ ಲೋಪದೋಷಗಳನ್ನು ಎತ್ತಿ ತೋರಿಸಿದೆ. “ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ತನಿಖಾ ತಂಡ ವಿಫಲವಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು. ಇದೇ ಅಂಶವನ್ನು ಆಧಾರವಾಗಿಟ್ಟುಕೊಂಡು ಸೌಜನ್ಯ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂ ಕೋರ್ಟ್ ಆದೇಶದಲ್ಲೇನಿದೆ?:
ಸೌಜನ್ಯ ಕುಟುಂಬದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠ, ಕೆಳ ನ್ಯಾಯಾಲಯದ ತೀರ್ಪನ್ನು ಗಮನಿಸಿ, ಪ್ರಕರಣದಲ್ಲಿ ತನಿಖೆಯ ವರದಿಯನ್ನು ಸಲ್ಲಿಸುವಂತೆ ಹೇಳಿದೆ. ಮಾತ್ರವಲ್ಲ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯಾಗಿರುವ ಸಿಬಿಐಗೆ ನೋಟೀಸ್ ಜಾರಿ ಮಾಡಿದೆ.












