ಬೆಳ್ತಂಗಡಿ: ಕು. ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳ ಲಿರುವ ಪ್ರಸ್ತಾವಿತ ಕ್ರಮಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.
‘ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಹಾಗೂ ಪ್ರಕರಣದಿಂದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಲಾಗಿದ್ದ ಪ್ರತ್ಯೇಕ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಆದೇಶವನ್ನು ಪ್ರಶ್ನಿಸಿ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ವಿನೋದ್ ಚಂದ್ರನ್ ಅವರ ಪೀಠವು, ‘ಇಂತಹ ಗಂಭೀರ ಪ್ರಕರಣದಲ್ಲಿ ನೀವು ಇಷ್ಟೊಂದು ನಿರಾಸಕ್ತಿ ತೋರುವುದು ಸರಿಯಲ್ಲ’ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ನೋಟಿಸ್ ನೀಡಿ ಪ್ರತಿಕ್ರಿಯೆ ಸಲ್ಲಿಸಲು ಈ ಹಿಂದೆಯೇ ಸಾಕಷ್ಟು ಕಾಲಾವಕಾಶ ನೀಡಿದ್ದರೂ ವಿವರವಾದ ವರದಿ ಸಲ್ಲಿಸಲು ವಿಳಂಬ ಮಾಡಿದ್ದು ಏಕೆ” ಎಂದು ಪೀಠ ಪ್ರಶ್ನಿಸಿತು.
‘ಈ ಪ್ರಕರಣವನ್ನು ಆರಂಭದಲ್ಲಿ ಸಿಐಡಿ ತನಿಖೆ ನಡೆಸಿತ್ತು. ನಂತರ ಸಿಬಿಐ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿತ್ತು’ ಎಂದು ಕರ್ನಾಟಕದ ಹೆಚ್ಚುವರಿ ಅಡ್ವಕೇಟ್ ಜನರಲ್ ಆವಿಷ್ಕಾರ್ ಸಿಂಫ್ಟಿ ಅವರಿಗೆ ನಿರ್ದೇಶನ ನೀಡಿತು.
‘ಈ ಪ್ರಕರಣವನ್ನು ಮತ್ತೊಮ್ಮೆ ಪರಿಶೀಲಿಸಲು ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಬಹುದೇ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ನಾವು ಬಯಸುತ್ತಿದ್ದೇವೆ. ಈ ಬಗ್ಗೆ ಸರ್ಕಾರದ ಸ್ಪಷ್ಟ ನಿಲುವನ್ನು ತಿಳಿಸಬೇಕು’ ಎಂದು ಪೀಠವು ರಾಜ್ಯ ಸರ್ಕಾರಕ್ಕೆ ಸೂಚಿಸಿತು.
ಪ್ರಕರಣದ ಬಗ್ಗೆ ಸಿಬಿಐ ಮತ್ತೆ ತನಿಖೆ ನಡೆಸಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದರು. ‘ಘಟನೆ ನಡೆದಿದ್ದು 2012ರಲ್ಲಿ. ಸಿಬಿಐ ತನಿಖೆಗೆ 2013ರಲ್ಲಿ ಹಸ್ತಾಂತರಿಸಲಾಗಿತ್ತು’ ಎಂದು ಪೀಠ ಹೇಳಿತು.
‘ಸಂತ್ರಸ್ತೆಗೆ ಸೇರಿದ ವಸ್ತುಗಳನ್ನು ಸಂರಕ್ಷಿಸಿ ಇಡಲಾಗಿದೆ. ಡಿಎನ್ಎ ಪರೀಕ್ಷೆ ನಡೆಸಿದರೆ ಸತ್ಯಾಂಶ ಬಯಲಿಗೆ ಬರಲಿದೆ. ನಿಜವಾದ ಆರೋಪಿಗಳು ಬೇರೆ ವ್ಯಕ್ತಿಗಳು ಎಂದು ವಿಚಾರಣಾ ನ್ಯಾಯಾಲಯವೂ ಹೇಳಿದೆ’ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.ಈ ಪ್ರಕರಣವನ್ನು ಜುಲೈ 14ರಂದು ಪರಿಗಣಿಸಲು ನ್ಯಾಯಪೀಠ ನಿರ್ಧರಿಸಿತು.
ಸಾಕ್ಷಿಗಳಿಗೆ ರಕ್ಷಣೆ:
ಪ್ರಕರಣದ ಎಲ್ಲ ಸಾಕ್ಷಿಗಳಿಗೆ ರಕ್ಷಣೆ ನೀಡಬೇಕೆಂದು ಸರ್ಕಾರಕ್ಕೆ ಪೀಠ ಸೂಚಿಸಿದೆ. ಸಂತ್ರಸ್ತರ ಕುಟುಂಬದ ಪರವಾಗಿ ಹಾಜರಾದ ಹಿರಿಯ ವಕೀಲರಾದ ಶೋಭಾ ಗುಪ್ತಾ, ಆನಂದ್ ಸಂಜಯ್ ಎಂ. ನುಲಿ ಮತ್ತು ಶೇಖರ್ ಜಿ ದೇವಸ, ‘ಪ್ರಕರಣದ ಕೆಲ ಸಾಕ್ಷಿಗಳು ನಿಗೂಢವಾಗಿ ಮೃತಪಟ್ಟಿದ್ದಾರೆ’ ಎಂದಾಗ ಪೀಠವು, ಸಾಕ್ಷಿಗಳಿಗೆ ರಕ್ಷಣೆ ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿತು.













