ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ಇವರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಗ್ಯಾರಂಟಿ ಅನುಷ್ಟಾನ ಸಮಿತಿ ಕಛೇರಿಯಲ್ಲಿ ನಡೆಯಿತು.
ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮತ್ತು ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆಯನ್ನು ಪರಿಶೀಲಿಸಲಾಯಿತು.
ಸರ್ಕಾರದ ಪಂಚಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ವಿಲೇವಾರಿಗೊಳಿಸುವ ಕುರಿತು ಚರ್ಚಿಸಲಾಯಿತು. ಗೃಹಜ್ಯೋತಿ ಯೋಜನೆಯಡಿ ಉಜಿರೆ ಉಪವಿಭಾಗದಲ್ಲಿ 2026ರ ಮಾರ್ಚ್-2026 ತಿಂಗಳಲ್ಲಿ 27170 ಕುಟುಂಬಗಳಿಗೆ 1,37,00,245/- ರೂ, ಬೆಳ್ತಂಗಡಿ ಉಪವಿಭಾಗದಲ್ಲಿ 2026ರ ಮಾರ್ಚ್ ತಿಂಗಳಲ್ಲಿ 44958 ಕುಟುಂಬಗಳಿಗೆ 2,67,58,297/-ರೂ ಸಹಾಯಧನ ದೊರತಿದ್ದು ತಾಲೂಕಿಗೆ ಈವರೆಗೆ 1,20,86,50,956/- ರೂ ಸಹಾಯಧನ ದೊರೆತಿರುವುದಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ ಪ್ರಕೃತ 59120 ಫಲಾನುಭವಿಗಳಿದ್ದು, ಆಗಸ್ಟ್-2023 ರಿಂದ ಫೆಬ್ರವರಿ-2026 ರವರೆಗೆ 315,94,82,000/-ರೂ ಸಹಾಯಧನ ದೊರೆತಿರುವುದಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇವರು ಸಭೆಗೆ ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ಸರ್ಕಾರದ ಆದೇಶದಂತೆ ಸಮೀಕ್ಷೆ ನಡೆಸಲಾಗಿದ್ದು, 827 ಪಡಿತರ ಚೀಟಿಗಳನ್ನು ಎ.ಪಿ.ಎಲ್ ಆಗಿ ಪರಿವರ್ತಿಸಲಾಗಿರುತ್ತದೆ. 1557 ಪಡಿತರ ಚೀಟಿಗಳನ್ನು ಬಿ.ಪಿ.ಎಲ್ ಆಗಿ ಮುಂದುವರಿಸಲಾಗಿದೆ. ಜುಲೈ-2023 ರಿಂದ ಜನವರಿ-2025ರವರೆಗೆ ಡಿಬಿಟಿ ಮುಖಾಂತರ 45613 ಪಡಿತರ ಚೀಟಿದಾರರಿಗೆ ಪ್ರತೀ ಕೆ.ಜಿ.ಗೆ ರೂಪಾಯಿ 34.00 ರಂತೆ 55,49,55,540.00ರೂಗಳ ಅನುದಾನವು ತಾಲೂಕಿನ ಪಡಿತರ ಚೀಟಿದಾರರಿಗೆ ದೊರೆತಿರುವುದಾಗಿ ಆಹಾರ ನಿರೀಕ್ಷಕರು ಸಭೆಗೆ ವಿವರ ನೀಡಿದರು.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 7661 ಫಲಾನುಭವಿಗಳಿದ್ದು, ಬೆಳ್ತಂಗಡಿ ತಾಲೂಕಿನ 941 ಅಭ್ಯರ್ಥಿಗಳಿಗೆ 2025ರ ನವೆಂಬರ್ ತಿಂಗಳಲ್ಲಿ 13,89,000ರೂ.ಗಳನ್ನು ಡಿ.ಬಿ.ಟಿ ಮೂಲಕ ಸಹಾಯಧನವನ್ನು ವಿತರಿಸಲಾಗಿದ್ದು, ಆಗಸ್ಟ್-2023 ರಿಂದ 2025ರ ನವೆಂಬರ್ ತಿಂಗಳವರೆಗೆ 2,70,22,500.00 ರೂ.ಗಳನ್ನು ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಶ್ರೀಮತಿ ಮಂಜೂಷರವರು ತಿಳಿಸಿದರು.
ಶಕ್ತಿ ಯೋಜನೆಯಡಿ ಧರ್ಮಸ್ಥಳ ಘಟಕದ ಬಸ್ಸುಗಳ ಮೂಲಕ 2026ರ ಏಪ್ರಿಲ್ ತಿಂಗಳಲ್ಲಿ 732902 ಮಹಿಳಾ ಪ್ರಯಾಣಿಕರು ಯೋಜನೆಯ ಸವಲತ್ತನ್ನು ಪಡೆದಿದ್ದು, ಜೂನ್-2023 ರಿಂದ ಈವರೆಗೆ ರೂ.104,74,91,925/- ಬಿಡುಗಡೆಯಾಗಿರುವುದಾಗಿ ಧರ್ಮಸ್ಥಳ ಘಟಕದ ಮೇಲ್ವಿಚಾಲಕರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ಶ್ರೀಮತಿ ಮೆರಿಟಾ ಪಿಂಟೋ, ವೀರಪ್ಪ ಮೊಯ್ಲಿ, ವಾಸುದೇವ ರಾವ್, ವಿಜಯಗೌಡ ಬೆಳಾಲು, ಶರೀಫ್ ಸಬರಬೈಲ್, ಕೆ.ನೇಮಿರಾಜ್ ಕಿಲ್ಲೂರು, ಶ್ರೀಮತಿ ವಂದನಾ, ಶ್ರೀಪತಿ ಉಪಾಧ್ಯಾಯ, ಅಬ್ದುಲ್ ಸಲಾಂ ಹಾಗೂ ನೋಡೆಲ್ ಅಧಿಕಾರಿಯಾದ ಹೆರಾಲ್ಡ್ ಸ್ವಿಕ್ವೇರಾ ಉಪಸ್ಥಿತರಿದ್ದರು.













