ಬೆಳ್ತಂಗಡಿ : ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆಯನ್ನು ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಘಟಕವು ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿ ಆಯೋಜಿಸಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಡಿ. ಯದುಪತಿ ಗೌಡ ವಹಿಸಿ ಸಾಹಿತ್ಯಕ ಚಟುವಟಿಕೆಗಳಿಗೆ ಎಲ್ಲರೂ ಪ್ರೋತ್ಸಾಹ ನೀಡಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಉಜಿರೆ ಶ್ರೀ ಧ. ಮಂ. ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ಡಾ. ದಿವ ಕೊಕ್ಕಡ ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತಾ ಶಾಂತಿಯುತ ಸೌಹಾರ್ದಯುತ ಸಮೃದ್ಧವಾದ ಸಮಾಜ ನಿರ್ಮಾಣದಲ್ಲಿ ಸಾಹಿತಿ ಮತ್ತು ಸಾಹಿತ್ಯದ ಪಾತ್ರ ಅತ್ಯಂತ ಮಹತ್ವದ್ದು. ಈ ನಿಟ್ಟಿನಲ್ಲಿ ಕನ್ನಡ ನಾಡು ನುಡಿ ಸಂಸ್ಕೃತಿಯ ಸಂರಕ್ಷಣೆಯ ಆಶಯ ಹೊಂದಿರುವ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು ಅತ್ಯಂತ ಹೊಣೆಗಾರಿಕೆಯ ಕೆಲಸಗಳನ್ನು ನಿರಂತರ ಮಾಡುತ್ತಾ ಬಂದಿದೆ ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಪ್ರೊ. ಪದ್ಮನಾಭ ಕೆ. ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ ಸುಧಾರಾಣಿ ಎನ್. ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಿಸಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಮಾರುತಿ ಜಿ. ಅತಿಥಿಗಳನ್ನು ಪರಿಚಯಿಸಿದರು. ಪ್ರಾಧ್ಯಾಪಕ ಡಾ. ಕೃಷ್ಣಾನಂದ ಗರ್ಡಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕು. ನಸೀಬಾ ನಿರೂಪಿಸಿ, ಉಪನ್ಯಾಸಕಿ ಡಾ. ಶೀಲಾವತಿ ಜಿ. ವಂದಿಸಿದರು.













