ಧರ್ಮಸ್ಥಳ: ‘ದಿ ಹಿಂದೂ ಗ್ರೂಫ್’ ಪ್ರಕಟಿಸಿರುವ ‘ಶ್ರೀ ಕ್ಷೇತ್ರ ಧರ್ಮಸ್ಥಳ : ದಿ ಹಾರ್ಟ್ ಆಫ್ ಧರ್ಮ’ ಎಂಬ ಕೃತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಹೆಗ್ಗಡೆಯವರು ಈ ಕೃತಿಯಲ್ಲಿ ದೇವಾಲಯ, ಅದರ ಮೂಲ ತತ್ವ, ಚತುರ್ದಾನ ಪರಂಪರೆ ಮತ್ತು ಅದರ ಅಡಿಯಲ್ಲಿ ಆಗುವ ಅನೇಕ ಕಾರ್ಯ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲಲಾಗಿದೆ. ಇದು ಲಕ್ಷಾಂತರ ಭಕ್ತರಿಗೆ, ಸಂಘ-ಸಂಸ್ಥೆಗಳಿಗೆ ಸ್ಫೂರ್ತಿಯನ್ನು ನೀಡಲಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್.ರವರು ಮಾತನಾಡಿ ಶ್ರೀ ಕ್ಷೇತ್ರದ ಸಮಾಜ ಸೇವೆ. ಕಾರ್ಯಚಟುವಟಿಕೆಗಳನ್ನು 96 ಪುಟಗಳಲ್ಲಿ ಸಂಕ್ಷಿಪ್ತಗೊಳಿಸುವುದು ಅಷ್ಟು ಸುಲಭವಲ್ಲ. ಈ ಪುಸ್ತಕವನ್ನು ಹೊರತರುವಲ್ಲಿ ಇದು ಬಹುದೊಡ್ಡ ಸವಾಲಾಗಿತ್ತು. ಆದರೆ ಆ ಕೆಲಸವನ್ನು ಈ ಕೃತಿಯಲ್ಲಿ ಯಶಸ್ವಿಯಾಗಿ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು, ಧರ್ಮಸ್ಥಳ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎಸ್. ಸತೀಶ್ಚಂದ್ರ ಮತ್ತು ದಿ ಹಿಂದೂ ಪತ್ರಿಕೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಕೃತಿಯಲ್ಲಿ ಧರ್ಮಸ್ಥಳ ಮತ್ತು ಅಲ್ಲಿನ ಕಾರ್ಯಚಟುವಟಿಕೆಗಳನ್ನು ಅತ್ಯಂತ ಸೂಕ್ಷ್ಮವಾಗಿ ಮನಮುಟ್ಟುವಂತೆ ವಿವರಿಸಲಾಗಿದೆ. ಲೇಖನಗಳಿಗೆ ಪೂರಕವಾದ ಆಕರ್ಷಕ ಛಾಯಾಚಿತ್ರಗಳನ್ನು ಒಳಗೊಂಡಿದೆ. ಶ್ರೀ ಕ್ಷೇತ್ರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಗ್ರಾಮೀಣ ಅಭಿವೃದ್ಧಿಗೆ ನೀಡಿದ ಕೊಡುಗೆಗಳ ಮೇಲೆ ಕೃತಿ ಬೆಳಕು ಚೆಲ್ಲಿದೆ. ಪ್ರತಿಗಳು ಬೇಕಾದವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.












