ಬೆಳ್ತಂಗಡಿ: ತಾಲ್ಲೂಕಿನ ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ಮಾಹಿತಿಯು ಇಂದು ಶಾಸಕರ ಕಚೇರಿಗೆ ತಲುಪಿರುತ್ತದೆ. ವಿಷಯದ ಗಂಭೀರತೆಯನ್ನು ಮನಗಂಡ ಮಾನ್ಯ ಶಾಸಕರು ತಕ್ಷಣವೇ ತಾಲೂಕು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಿ, ಕುಡಿಯುವ ನೀರಿನ ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುತ್ತಾರೆ.

ಶಾಸಕರ ನಿರ್ದೇಶನದಂತೆ ಇಂದು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ಪೂರ್ಣಗೊಳಿಸಿ ನಾಳೆಯಿಂದಲೇ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿರುತ್ತಾರೆ.

ಯಾವುದೇ ಅಡಚಣೆಗಳು ಎದುರಾದಲ್ಲಿ ತಕ್ಷಣ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದ್ದು, ಲಭ್ಯವಿರುವ ಅವಕಾಶಗಳು ಮತ್ತು ಸಂಪನ್ಮೂಲಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಪೂರಕ ಸಹಕಾರ ಒದಗಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಲಾಗಿದೆ. ಸಮಸ್ಯೆಯನ್ನು ಗಮನಕ್ಕೆ ತಂದ ಸಾರ್ವಜನಿಕರ ಕಾರ್ಯಕ್ಕೆ ವಂದನೆಗಳನ್ನು ತಿಳಿಸಿದ್ದಾರೆ.












