ಬೆಳ್ತಂಗಡಿ: 2026–27ನೇ ಶೈಕ್ಷಣಿಕ ವರ್ಷದ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಪಿಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೆಳ್ತಂಗಡಿ ಇಲ್ಲಿ ಸಂಭ್ರಮದಿಂದ ನೆರವೇರಿತು.
ಕಾರ್ಯಕ್ರಮದ ಅಂಗವಾಗಿ ಒಂದನೇ ತರಗತಿಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಕಿರೀಟ ತೊಡಿಸಿ, ಕೈಗೆ ಬಲೂನ್ ನೀಡಿ ಆತ್ಮೀಯವಾಗಿ ಶಾಲೆಗೆ ಸ್ವಾಗತಿಸಲಾಯಿತು. ಪುಟಾಣಿಗಳ ಸಂಭ್ರಮ ಹಾಗೂ ಪೋಷಕರ ಹರ್ಷದಿಂದ ಶಾಲಾ ವಾತಾವರಣ ಹಬ್ಬದ ಕಳೆಗಟ್ಟಿತ್ತು.

ಮೆಗಾ ಪೋಷಕರ ಸಭೆಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಗುವ ಪಠ್ಯಪುಸ್ತಕಗಳು ಹಾಗೂ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿ, “ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು, ಪೋಷಕರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಶ್ರೀಮತಿ ರಾಜಶ್ರೀ ಅವರು ಮಾತನಾಡಿ, “ವಿದ್ಯಾರ್ಥಿಗಳ ಕಲಿಕಾ ಪ್ರಗತಿಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮನೆಯಲ್ಲಿ ಮಕ್ಕಳ ಅಧ್ಯಯನದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರ ಜೊತೆಗೆ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಮುದಾಯದ ಸಹಕಾರವೂ ಅಗತ್ಯ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಬಸವಲಿಂಗಪ್ಪ ಟಿ.ಬಿ., ಮೋಹನ್ ಕುಮಾರ್, ಕ್ಷೇತ್ರ ಸಮನ್ವಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸೀತಾ ಆರ್. ಶೇಟ್, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜಾ, ಎಸ್ಡಿಎಂಸಿ ಅಧ್ಯಕ್ಷ ಜಮೀರ್ ಸಹದಿ, ಶಾಲಾ ಮುಖ್ಯೋಪಾಧ್ಯಾಯರಾದ ಪಿ. ಶಿವಾನಂದ ಭಂಡಾರಿ, ಎಸ್.ಡಿ.ಎಂಸಿ ಸದಸ್ಯರು, ಪೋಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಸಭೆಯಲ್ಲಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಾಲೆಯ ವಿವಿಧ ಯೋಜನೆಗಳು, ಶಿಸ್ತು, ಹಾಜರಾತಿ ಹಾಗೂ ಪೋಷಕರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮವು ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ನೆರವೇರಿತು.












