ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ನೇತೃತ್ವದಲ್ಲಿ ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಇಲಾಖೆ ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಬೆಳ್ತಂಗಡಿ ವನ್ಯ ಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠ ಅವರು ಮಾತನಾಡಿ, ‘ಪ್ರಕೃತಿಯನ್ನು ಸ್ವಚ್ಚವಾಗಿಸುವುದು ನಮ್ಮ ಜವಾಬ್ದಾರಿ. ಪರಿಸರ ಉತ್ತವಾಗಿದ್ದಷ್ಟು ನಮ್ಮ ಆರೋಗ್ಯವೂ ಉತ್ತಮವಾಗಿರಲು ಸಾಧ್ಯ. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಕೃತಿಯನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು’ ಎಂದರು.
ಸಂಪನ್ಮೂಲ ವ್ಯಕ್ತಿ ಉಪ ವಲಯ ಅರಣ್ಯಾಧಿಕಾರಿ ಕೆ.ಸಿ. ಮ್ಯಾಥ್ಯೂ ಮಾತನಾಡಿ, ‘ಪ್ರಕೃತಿ ದೇವರ ಕೊಡುಗೆ. ಮನುಷ್ಯನ ಆಲೋಚನೆಗಳಿಗೆ ನಿಲುಕದ ಸೃಷ್ಟಿ ವೈಭವ ಈ ಪ್ರಕೃತಿಯಲ್ಲಿದೆ. ಅರಣ್ಯ, ಜಲ, ಮಣ್ಣು, ವಾತಾವರಣದ ರಕ್ಷಣೆ ಮಾಡಬೇಕು. ಪ್ರತಿ ವರ್ಷ ವ್ಯಕ್ತಿಯೋರ್ವ ಒಂದು ಗಿಡ ನೆಟ್ಟು ಪೋಷಿಸಬೇಕು. ಈ ಪ್ರಕೃತಿಯಲ್ಲಿರುವ ಎಲ್ಲಾ ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಸಬೇಕಾಗಿದೆ. ನೀರಿನ ಸದ್ಭಳಕೆ ಮಾಡಬೇಕಾದುದು ನಮ್ಮ ಜವಾಬ್ದಾರಿಯಾಗಿದೆ’ ಎಂದರು.
ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಇದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ, ಅರಣ್ಯ ಇಲಾಖೆಯ ಸಿಬ್ಬಂದಿ ಸುರೇಶ್ ಹಾಗೂ ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿನಿಯರಾದ ರಕ್ಷಿತಾ, ಶ್ವೇತಾ ಹಾಗೂ ಮೇಘನಾ ಪ್ರಾರ್ಥಿಸಿದರು. ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕ ಹರೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಕನ್ನಡ ವಿಭಾಗದ ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು ವಂದಿಸಿದರು.












