ಶಾಂತಿವನ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಅಂಗವಾಗಿ ಆಸ್ಪತ್ರೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕನ್ನಡ ಚಲನಚಿತ್ರರಂಗದ ಖ್ಯಾತ ನಟ ದೀಪಕ್ ಶೆಟ್ಟಿ ಗಿಡಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, “ಗಿಡ ನೆಡುವುದಷ್ಟೇ ಮುಖ್ಯವಲ್ಲ, ಮರಗಳನ್ನು ಕಡಿಯುವುದನ್ನು ನಿಲ್ಲಿಸಬೇಕು. ಆಹಾರ, ಆಶ್ರಯ ಹಾಗೂ ನೀರಿನ ಜೊತೆಗೆ ಆಮ್ಲಜನಕವೂ ನಮ್ಮ ಮೂಲಭೂತ ಅಗತ್ಯಗಳಲ್ಲಿ ಒಂದಾಗಿ ಪರಿಗಣಿಸಬೇಕಾಗಿದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರಕೃತಿಯನ್ನು ಉಳಿಸಿ ಬೆಳೆಸುವ ಸಂಕಲ್ಪವನ್ನು ಎಲ್ಲರೂ ಮಾಡಬೇಕು” ಎಂದು ಹೇಳಿದರು.
ಶಾಂತಿವನದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್ ಶೆಟ್ಟಿ ಮಾತನಾಡಿ, “ಶಾಂತಿವನದಾದ್ಯಂತ ಸುಮಾರು 200 ಗಿಡಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸಿ ಬೆಳೆಸುವ ಕಾರ್ಯವನ್ನು ಕೈಗೊಂಡಿದ್ದೇವೆ. ಪರಿಸರ ಪ್ರೇಮವು ಒಂದು ದಿನದ ಆಚರಣೆಗೆ ಮಾತ್ರ ಸೀಮಿತವಾಗದೆ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲರೂ ಪರಿಸರ ಸಂರಕ್ಷಣೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಮಿತಬಳಕೆಯ ಕುರಿತು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಶಾಂತಿವನ ಟ್ರಸ್ಟ್ನ ಕಾರ್ಯದರ್ಶಿಗಳಾದ ಜಗನ್ನಾಥ್, ಶಾಂತಿವನದ ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ. ಬಿಂದು, ಯೋಗ ನಿರ್ದೇಶಕರಾದ ಡಾ. ಶಶಿಕಾಂತ್ ಜೈನ್, ಪ್ರಬಂಧಕರಾದ ಸ್ವಸ್ತಿಕ್, ವೈದ್ಯಾಧಿಕಾರಿಗಳು, ವೈದ್ಯ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ಸಾಧಕರು ಉಪಸ್ಥಿತರಿದ್ದರು.












