ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆಯೊಂದು ಕುಸಿದ ಘಟನೆ ನಡೆದಿದೆ.

ಕಳೆದ ಒಂದು ತಿಂಗಳಿಂದ ನಿರಂತರವಾಗಿ ಸಾಧಾರಣ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಘಾಟಿ ಪ್ರದೇಶದಲ್ಲಿ ಭೂಮಿಯ ತೇವಾಂಶ ಹೆಚ್ಚಾಗಿದ್ದು ಇದೇ ಕಾರಣದಿಂದ ಬಂಡೆ ಕುಸಿದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಬಂಡೆ ಕುಸಿತ ಸಂಭವಿಸಿದರೂ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವಾಹನ ಸಂಚಾರಕ್ಕೂ ಯಾವುದೇ ತೊಂದರೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಲೆನಾಡಿನ ವಿವಿಧ ಭಾಗಗಳಲ್ಲಿ ಆಗಾಗ ಸಾಧಾರಣ ಮಳೆಯಾಗುತ್ತಿದ್ದು, ಘಾಟಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.













