ಬೆಳ್ತಂಗಡಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಲ್ ಅಂತ್ಯೋದಯ ಯೋಜನೆ -ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ–ಕರ್ನಾಟಕ (DAY-NRLM), ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಕೃಷಿ ಇಲಾಖೆ ಹಾಗೂ ನೇಸರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.), ಮಡಂತ್ಯಾರು ಇವರ ಸಹಯೋಗದಲ್ಲಿ ಎರಡು ದಿನಗಳ ಮಸಾಲಾ ಉತ್ಪನ್ನಗಳ ತರಬೇತಿ ಕಾರ್ಯಾಗಾರವು ನೇಸರ ಸಂಜೀವಿನಿ ಒಕ್ಕೂಟದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಮಾತನಾಡಿ, ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (DAY-NRLM) ಯೋಜನೆಯು ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ ಮತ್ತು ಅವಕಾಶಗಳನ್ನು ಒದಗಿಸುತ್ತಿದೆ. ಮಹಿಳೆಯರು ಇಂತಹ ಕೌಶಲ್ಯಾಧಾರಿತ ತರಬೇತಿಗಳನ್ನು ಸದುಪಯೋಗಪಡಿಸಿಕೊಂಡು ಸ್ವ ಉದ್ಯೋಗದಲ್ಲಿ ತೊಡಗಿ ಆದಾಯವನ್ನು ಹೆಚ್ಚಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗಿ ಬಡತನದಿಂದ ಹೊರಬರಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಗಣೇಶ ಅಡಿಗ ಮಾತನಾಡಿ, ಕೃಷಿ ಇಲಾಖೆಯ ವತಿಯಿಂದ ವಿವಿಧ ತರಬೇತಿಗಳನ್ನು ಆಯೋಜಿಸಲಾಗುತ್ತಿದ್ದು, ಮಹಿಳೆಯರು ಇಂತಹ ಕಾರ್ಯಕ್ರಮಗಳ ಪ್ರಯೋಜನವನ್ನು ಪಡೆದು ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣವನ್ನು DAY-NRLM ಯೋಜನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೇಸರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.), ಮಡಂತ್ಯಾರು ಅಧ್ಯಕ್ಷೆ ದೇವಕಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೀರಾ ಎಸ್. ಅಮೀನ್, DAY-NRLM ಯೋಜನೆಯ ತಾಲೂಕು ವ್ಯವಸ್ಥಾಪಕರಾದ ನಿತೀಶ್, ಬಂಗಾರಪ್ಪ ಹಾಗೂ ವಲಯ ಮೇಲ್ವಿಚಾರಕರಾದ ವೀಣಾಶ್ರೀ ಉಪಸ್ಥಿತರಿದ್ದರು.
ಜ್ಯೋತಿ ಸ್ವಾಗತಿಸಿದರು. ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಬೇಬಿ ವಂದನಾರ್ಪಣೆ ಸಲ್ಲಿಸಿದರು.













