ಬೆಳ್ತಂಗಡಿ: ಇಲ್ಲಿನ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗದಲ್ಲಿರುವ ಬೃಹತ್ ಮರವು ಗಾಳಿ-ಮಳೆಯ ಸಂದರ್ಭ ಮನೆಗಳ ಮೇಲೆ ಬೀಳುವ ಅಪಾಯವನ್ನು ತಂದೊಡ್ಡಿದ್ದು,ಸ್ಥಳೀಯ ನಿವಾಸಿಗಳು ಭಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ.

ಈ ಬಗ್ಗೆ ಹಲವಾರು ಬಾರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಲಿಖಿತ ಹಾಗೂ ಮೌಖಿಕವಾಗಿ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಳೆಗಾಲ ತೀವ್ರಗೊಂಡಿರುವ ಈ ಸಂದರ್ಭದಲ್ಲಿ ಮರವು ಯಾವ ಕ್ಷಣದಲ್ಲಾದರೂ ಮನೆಗಳ ಮೇಲೆ ಉರುಳಿ ಬಿದ್ದು ಜೀವಹಾನಿ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡುವ ಸಾಧ್ಯತೆ ಇದೆ. ಅಪಾಯದ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸಾರ್ವಜನಿಕರ ಸುರಕ್ಷತೆಯ ಬಗ್ಗೆ ಇಲಾಖೆಯ ಉದಾಸೀನತೆಯನ್ನು ತೋರಿಸುತ್ತಿದೆ. ಯಾವುದೇ ದುರಂತ ಸಂಭವಿಸಿದ ಬಳಿಕ ಮಾತ್ರ ಅಧಿಕಾರಿಗಳು ಎಚ್ಚೆತ್ತುಕೊಳ್ಳುವರೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಮುಂದೆ ಯಾವುದೇ ಜೀವಹಾನಿ ಅಥವಾ ಆಸ್ತಿ ನಷ್ಟ ಸಂಭವಿಸಿದಲ್ಲಿ ಅದರ ಸಂಪೂರ್ಣ ಹೊಣೆಯನ್ನು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳೇ ಹೊರಬೇಕಾಗುತ್ತದೆ ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಪಾಯಕಾರಿಯಾದ ಮರವನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.












