ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ Girls Safety and Welfare Committee ವತಿಯಿಂದ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಮತ್ತು ಸುರಕ್ಷತಾ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಎ. ಜೆ. ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ಡಾ. ಸಂಸ್ಕೃತಿ ಎಚ್. ಎಸ್. ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಸುರಕ್ಷಿತ ಸೈಕಲ್ ಸಂಚಾರ, ಆರೋಗ್ಯಕರ ಜೀವನಶೈಲಿ, ವೈಯಕ್ತಿಕ ಸ್ವಚ್ಛತೆ, ಕಿಶೋರಿಯರ ಆರೋಗ್ಯ ಸಂಬಂಧಿತ ಸಮಸ್ಯೆಗಳು ಹಾಗೂ ಮಹಿಳಾ ಸುರಕ್ಷತೆ ಕುರಿತು ವಿದ್ಯಾರ್ಥಿನಿಯರಿಗೆ ಸಮಗ್ರ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ವಿದ್ಯಾರ್ಥಿನಿಯರ ಸಂದೇಹಗಳಿಗೆ ಉತ್ತರ ನೀಡಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹತ್ವವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಎ. ಜೆ. ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್, ಮಂಗಳೂರು ಇದರ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಶ್ರೀ ಅಭಿ ಅಬ್ರಹಾಂ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ವಹಿಸಿದ್ದರು.
ಗಣಿತ ವಿಭಾಗದ ಉಪನ್ಯಾಸಕಿ ರಾಜಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ರಾಧಿಕಾ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ರಕ್ಷಾ ವಂದಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕಿಯರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.












