ಕೊಯ್ಯೂರು : “ಮನುಷ್ಯ ಎಷ್ಟೇ ಎತ್ತರಕ್ಕೆ ಏರಿದರೂ ತಂದೆ -ತಾಯಿ -ಗುರುಹಿರಿಯರನ್ನು ಗೌರವಿಸುವುದನ್ನು ಮರೆಯಬಾರದು ” ಎಂಬುದಾಗಿ ಬೆಳ್ತಂಗಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ನ ಸಹ ಪ್ರಾಧ್ಯಾಪಕ ಡಾ. ಕುಶಾಲಪ್ಪ ಎಸ್. ಅಭಿಪ್ರಾಯ ಪಟ್ಟರು.
ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜ್ ನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅನೇಕ ಮಹಾಪುರುಷರ ಜೀವನ, ಸಾಹಸಗಳ ನಿದರ್ಶನಗಳನ್ನು ನೀಡಿದರು. ವಿದ್ಯಾರ್ಥಿ ಸಂಘದ ಉದ್ಘಾಟನೆಗೈದ ಕೊಯ್ಯೂರು ಪ್ಯಾಕ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತ ಕೃಷ್ಣ ಭಟ್ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು ರೂಢಿಸಿಕೊಳ್ಳುವುದರೊಂದಿಗೆ ಮಾದಕದ್ರವ್ಯಗಳoತಹ ವಸ್ತು ಗಳಿಂದ ದೂರವಿರಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೊಯ್ಯೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿ ಜವಾಬ್ದಾರಿ ವಹಿಸಿಕೊಂಡ ಸುಧಾಕರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯರಾದ ಮೋಹನ ಗೌಡ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ದರ್ಶಿತ್, ಕಾರ್ಯದರ್ಶಿ ಕುಮಾರಿ ದಿವ್ಯ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ದಿವ್ಯ, ಪ್ರಜ್ಞಾ, ಯಜ್ಞಶ್ರೀ, ಕೀರ್ತಿ, ಕೃಪಾರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಸ್ವಾಗತಿಸಿದರು.ಪ್ರಶಿಕ್ಷಣಾರ್ಥಿ ದುರ್ಗಾಪ್ರಸನ್ನ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಯಶೋಧ ವಂದನಾರ್ಪಣೆಗೈದರು.ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಭವ್ಯ ಎಂ. ಮತ್ತು ಪವಿತ್ರ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.













