ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ (ಕ್ರೈಂ ನಂ. 164/2018) ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಎಸ್.ಸಿ. ನಂ. 68/2022 ಪ್ರಕರಣದ ವಿಚಾರಣೆಗೆ ಸುಮಾರು ನಾಲ್ಕು ತಿಂಗಳಿನಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೆಂಪಕೋಡಿ ನಿವಾಸಿ ಕುಂಯಾ ಅವರ ಪುತ್ರ ಆನಂದ (40) ಎಂದು ಗುರುತಿಸಲಾಗಿದೆ. ಈ ಪ್ರಕರಣವು ಐಪಿಸಿ ಕಲಂ 341, 324, 504, 506, 307 ಹಾಗೂ 34ರ ಅಡಿಯಲ್ಲಿ ದಾಖಲಾಗಿದ್ದು, ವ್ಯಕ್ತಿಯನ್ನು ಅಡ್ಡಗಟ್ಟಿ, ಅವಮಾನಿಸಿ, ಜೀವ ಬೆದರಿಕೆ ಹಾಕಿ, ಬಳಿಕ ಆಯುಧದಿಂದ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿದ ಆರೋಪ ಇದಾಗಿದೆ.
ಬೆಳ್ತಂಗಡಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಹಾಗೂ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ಅವರ ತಂಡ ಜುಲೈ 4ರಂದು ಬೆಳಿಗ್ಗೆ ಕೊಕ್ಕಡದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.ಬಳಿಕ ಆರೋಪಿಯನ್ನು ಮಂಗಳೂರು ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಯಿಂದ ರೂಪಾಯಿ 500 ದಂಡ ಪಾವತಿಸಿಕೊಂಡು, ಸೂಕ್ತ ಭದ್ರತೆಯೊಂದಿಗೆ ಬಿಡುಗಡೆ ಮಾಡಿದೆ.














