ಕೊಯ್ಯೂರು: ಬಜಿಲ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಜು.10 ರಂದು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಯ್ಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಹರಿಣಾಕ್ಷಿ ಇವರು ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಬಳಕೆ, ಪೌಷ್ಟಿಕ ಆಹಾರದ ಮಹತ್ವ, ನಿಯಮಿತ ವ್ಯಾಯಾಮ, ಯೋಗಾಭ್ಯಾಸ ಹಾಗೂ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ನೀಡಿದರು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ವಚ್ಛತೆಯನ್ನು ಪಾಲಿಸುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ನಂತರ ಮೊಬೈಲ್ ಫೋನ್ನ ಅತಿಯಾದ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು. ದೀರ್ಘಕಾಲ ಮೊಬೈಲ್ ಬಳಸುವುದರಿಂದ ಕಣ್ಣಿನ ತೊಂದರೆ, ನಿದ್ರಾಹೀನತೆ, ಏಕಾಗ್ರತೆಯ ಕೊರತೆ ಹಾಗೂ ಅಧ್ಯಯನದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಲಾಯಿತು. ವಿದ್ಯಾರ್ಥಿಗಳು ಅಗತ್ಯವಿದ್ದಾಗ ಮಾತ್ರ ಮೊಬೈಲ್ ಬಳಸಬೇಕು ಹಾಗೂ ಹೆಚ್ಚು ಸಮಯವನ್ನು ಓದು, ಆಟ ಮತ್ತು ಸೃಜನಾತ್ಮಕ ಚಟುವಟಿಕೆಗಳಿಗೆ ಮೀಸಲಿಡುವಂತೆ ಸಲಹೆ ನೀಡಲಾಯಿತು.
ಅಲ್ಲದೆ, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ಮಾದಕ ದ್ರವ್ಯಗಳ ಸೇವನೆಯು ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಉಂಟುಮಾಡುವ ಹಾನಿಕಾರಕ ಪರಿಣಾಮಗಳನ್ನು ವಿವರಿಸಲಾಯಿತು. ಯಾವುದೇ ರೀತಿಯ ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನ ನಡೆಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸಿ ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡರು.















