ಬೆಳ್ತಂಗಡಿ: ಶ್ರೀ ಆದಿ ಧೂಮಾವತಿ ಹಾಗೂ ಶ್ರೀ ದೇಯಿಬೈದೆತಿ ಕೃಪಾಪೋಷಿತ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಪ್ರಧಾನ ಸಂಚಾಲಕರಾಗಿ ಲ.ನಿತ್ಯಾನಂದ ನಾವರ ಅವರನ್ನು ನೇಮಕ ಮಾಡಲಾಗಿದೆ.
ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಿತ್ಯಾನಂದ ನಾವರ ಅವರು, ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾಗಿ, ಕ್ಷೇತ್ರಾಡಳಿತ ಸಮಿತಿ ಅಭಿವೃದ್ಧಿ ಟ್ರಸ್ಟ್ನ ಟ್ರಸ್ಟಿಯಾಗಿ ಹಾಗೂ ನಾವರ ಗೆಜ್ಜೆಗಿರಿ ಯಕ್ಷಗಾನ ಬಯಲಾಟ ಸಮಿತಿಯ ಪ್ರಧಾನ ಸಂಚಾಲಕರಾಗಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ.
ದೇವಸ್ಥಾನ, ದೈವಸ್ಥಾನ, ಶಾಲೆಗಳು, ಗ್ರಾಮಾಭಿವೃದ್ಧಿ ಯೋಜನೆಗಳು ಹಾಗೂ ಅಂತರಾಷ್ಟ್ರೀಯ ಸೇವಾ ಸಂಸ್ಥೆಗಳ ಮೂಲಕ ಜನಪರ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ನ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಕ್ಷಗಾನ ಮೇಳವು ವರ್ಷಕ್ಕೆ ಸುಮಾರು 140ಕ್ಕೂ ಅಧಿಕ ಯಕ್ಷಗಾನ ಪ್ರದರ್ಶನಗಳನ್ನು ನೀಡುತ್ತಿದ್ದು, ಕಳೆದ ಐದು ವರ್ಷಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ನೂರಾರು ಯಶಸ್ವಿ ಪ್ರದರ್ಶನಗಳನ್ನು ನೀಡುವ ಮೂಲಕ ಕ್ಷೇತ್ರದ ಧಾರ್ಮಿಕ ಮಹಿಮೆ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತಿದೆ. ಅನುಭವಿ ಹಾಗೂ ಪ್ರತಿಭಾವಂತ ಕಲಾವಿದರನ್ನು ಒಳಗೊಂಡಿರುವ ಈ ತಂಡವು ಯಕ್ಷಗಾನ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಜಯಂತ್ ನಡುಬೈಲು, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಕ್ಷೇತ್ರದ ಮಾರ್ಗದರ್ಶಕ ಚಿತ್ತರಂಜನ್ ಕಂಕನಾಡಿ, ಕಳೆದ ಅವಧಿಯ ಪ್ರಧಾನ ಸಂಚಾಲಕ ಪ್ರಮಾಲ್ ಕುಮಾರ್ ಕಾರ್ಕಳ ಹಾಗೂ ಸಮಿತಿಯ ಪ್ರಮುಖರು ನೂತನ ಪ್ರಧಾನ ಸಂಚಾಲಕರಾದ ನಿತ್ಯಾನಂದ ನಾವರ ಅವರಿಗೆ ಶುಭ ಹಾರೈಸಿ, ತಮ್ಮ ಮಾರ್ಗದರ್ಶನ ಮತ್ತು ಸಹಕಾರದ ಭರವಸೆ ನೀಡಿದರು.















