ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ಯುವ ರೆಡ್ ಕ್ರಾಸ್ (YRC) ಘಟಕಗಳ 2026–27ನೇ ಶೈಕ್ಷಣಿಕ ವರ್ಷದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಜು. 15ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್, ಸುಂಕದಕಟ್ಟೆ, ಮಂಗಳೂರು ಇಲ್ಲಿನ ಉಪನ್ಯಾಸಕರೂ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ದಿವಾಕರ ಶೆಟ್ಟಿ ಅವರು ದೀಪ ಪ್ರಜ್ವಲನೆ ಹಾಗೂ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ಯುವಜನರಲ್ಲಿ ವ್ಯಕ್ತಿತ್ವ ವಿಕಸನ, ದೇಶಪ್ರೇಮ, ನಾಯಕತ್ವ ಹಾಗೂ ಸೇವಾ ಮನೋಭಾವವನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ನಂತಹ ಸ್ವಯಂಸೇವಾ ಸಂಘಟನೆಗಳ ಪಾತ್ರ ಮಹತ್ತರವಾಗಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದರಿಂದ ಜೀವನ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯ ಅರಿವು ಬೆಳೆಯುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮಾತನಾಡಿ, ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕಗಳು ರಕ್ತದಾನ ಶಿಬಿರ, ರಾಷ್ಟ್ರೀಯ ಯುವ ದಿನಾಚರಣೆ, ವಾರ್ಷಿಕ ವಿಶೇಷ ಶಿಬಿರ, ಆರೋಗ್ಯ ಜಾಗೃತಿ ಕಾರ್ಯಕ್ರಮ ಸೇರಿದಂತೆ ಅನೇಕ ಸಮಾಜಮುಖಿ ಚಟುವಟಿಕೆಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡಿವೆ. ವಿದ್ಯಾರ್ಥಿಗಳು ಇಂತಹ ಸೇವಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.
ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ. ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಸಾಯಿ ಚರಣ್ ಸಿ.ಎಚ್. ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಉಪ ಯೋಜನಾಧಿಕಾರಿ ತ್ರಿಭುವನ್ ಜೈನ್ ಅವರು ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಸ್ವಯಂಸೇವಕಿ ವರ್ಷಾ ಕೆ.ಪಿ. ಸ್ವಾಗತಿಸಿದರು. ಸ್ವಯಂಸೇವಕಿ ಮಂಜೂಷ ಹೆಗ್ಡೆ ಕಾರ್ಯಕ್ರಮವನ್ನು ನಿರೂಪಿಸಿದರು. ಮಾನ್ಯ ಡಿ.ಪಿ. ವಂದನಾರ್ಪಣೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಸ್ವಯಂಸೇವಕರು ಉಪಸ್ಥಿತರಿದ್ದರು.















