ಕೊಯ್ಯೂರು: ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಲ್ಲಿ ನಮ್ಮ ಸಂಸ್ಕೃತಿ, ಕಲೆ ಹಾಗೂ ಪರಂಪರೆಯ ಬಗ್ಗೆ ಆಸಕ್ತಿ ಬೆಳೆಸಿ, ಮುಂದಿನ ಪೀಳಿಗೆಗೆ ಉಳಿಸುವ ಉದ್ದೇಶದಿಂದ ಜನಪದ ಕಲೆಯಾದ ಯಕ್ಷಗಾನ ನಾಟ್ಯ ತರಬೇತಿಯನ್ನು ಉದ್ಘಾಟಿಸಲಾಯಿತು.

ವಿದ್ಯಾಭಿಮಾನಿಗಳಾದ ಕೂಸಪ್ಪ ಪೂಜಾರಿ ಇವರು ದೀಪ ಬೆಳಗಿಸುವ ಮೂಲಕ ಯಕ್ಷಗಾನ ನೃತ್ಯ ತರಬೇತಿಯನ್ನು ಉದ್ಘಾಟಿಸಿ, ನಮ್ಮ ನಾಡಿನ ಹೆಮ್ಮೆಯ ಸಾಂಸ್ಕೃತಿಕ ಕಲೆ. ಯಕ್ಷಗಾನ ಕೇವಲ ಮನರಂಜನೆಯ ಮಾಧ್ಯಮವಲ್ಲದೆ ಶಿಸ್ತು, ಸಂಯಮ, ಭಾಷಾ ಸೌಂದರ್ಯ, ಅಭಿನಯ ಕೌಶಲ್ಯ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ಮಹತ್ವದ ಕಲಾರೂಪವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಹರೀಶ್ ಗೌಡ ಮಾತನಾಡುತ್ತಾ ವಿದ್ಯಾರ್ಥಿಗಳು ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ತರಬೇತಿಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯಕ್ಷಗಾನ ನಾಟ್ಯ ಗುರುಗಳಾದ ದೇವಿಪ್ರಸಾದ್ ಆಚಾರ್ಯ, ಶಕ್ತಿನಗರ, ಗುರುವಾಯನಕೆರೆ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಅತಿಥಿ ಶಿಕ್ಷಕಿ ಶ್ರೀಮತಿ ಸೌಮ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಸ್ವಾಗತಿಸಿ, ಶ್ರೀಮತಿ ಕುಸುಮಾವತಿ ಧನ್ಯವಾದವಿತ್ತರು.















