ಬೆಳ್ತಂಗಡಿ: ಗುರುವಾಯನಕೆರೆ ಕೆರೆಯ ಸಮೀಪ ರಾಜ್ಯ ಹೆದ್ದಾರಿಯ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು,ವಾಹನ ಸವಾರರು ಪ್ರತಿದಿನ ಸಂಕಷ್ಟ ಅನುಭವಿಸುವಂತಾಗಿದೆ. ರಸ್ತೆಯಲ್ಲಿ ಉಂಟಾಗಿರುವ ದೊಡ್ಡ ದೊಡ್ಡ ಹೊಂಡಗಳಿಂದಾಗಿ ವಾಹನಗಳನ್ನು ಚಲಾಯಿಸುವುದು ಸವಾಲಾಗಿ ಪರಿಣಮಿಸಿದ್ದು, ಅಪಘಾತದ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಗುಂಡಿಗಳನ್ನು ತಪ್ಪಿಸಲು ವಾಹನ ಸವಾರರು ಹರಸಾಹಸ ಪಡುತ್ತಿದ್ದು, ಎದುರಿನಿಂದ ಬರುವ ವಾಹನಗಳಿಗೆ ಜಾಗ ಬಿಡುವ ಸಂದರ್ಭಗಳಲ್ಲಿ ಅಪಾಯದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಕ್ಕೆ ತೆರಳುವ ಸಿಬ್ಬಂದಿ ಹಾಗೂ ಸಾರ್ವಜನಿಕರು ಪ್ರತಿನಿತ್ಯ ಇದೇ ರಸ್ತೆಯನ್ನು ಅವಲಂಬಿಸಿರುವುದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮಳೆ ನೀರು ಹೊಂಡಗಳಲ್ಲಿ ನಿಂತಿರುವುದರಿಂದ ಅವುಗಳ ಆಳ ಅರಿಯಲು ಸಾಧ್ಯವಾಗದೆ ದ್ವಿಚಕ್ರ, ಕಾರುಗಳ ವಾಹನ ಸವಾರರು ಹೆಚ್ಚಾಗಿ ಅಪಾಯಕ್ಕೆ ಸಿಲುಕುತ್ತಿದ್ದಾರೆ. ಈ ರಸ್ತೆ ಮೂಲಕ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದರೂ, ಸಂಬಂಧಪಟ್ಟ ಇಲಾಖೆ ಇದುವರೆಗೆ ಶಾಶ್ವತ ದುರಸ್ತಿ ಕಾಮಗಾರಿ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.
ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಗಮನಹರಿಸಿ,ರಸ್ತೆ ದುರಸ್ತಿಗೊಳಿಸಿ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.















